ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಾ. ಡಿ.ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇವರಾಜ ಅರಸು ಸಾಮಾಜಿಕ ನ್ಯಾಯದ ಪರ ಇದ್ದವರು.
ಬಡವರು, ದಲಿತರು, ರೈತರು, ಮಹಿಳೆಯರ ಪರ ಇದ್ದವರು. ಅವರ ಕೊಡುಗೆ ಅಪಾರವಾದದ್ದು. ಹೀಗಾಗಿ ಅವರಿಗೆ ಮರಣೋತ್ತರವಾಗಿಯಾದರೂ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದರು. ಅಷ್ಟೇ ಅಲ್ಲದೆ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ “ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ’ ಎಂದು ಮರುನಾಮಕರಣವನ್ನೂ ಮಾಡುವುದಾಗಿ ಪ್ರಕಟಿಸಿದರು.
ನ.1ಕ್ಕೆ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ:
1973ರಲ್ಲಿ ದೇವರಾಜ ಅರಸು ಅವರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು ನವೆಂಬರ್ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ನವೆಂಬರ್ 1ರಂದು ಅನಾವರಣಗೊಳಿಸಲಾಗುವುದು. ಭುವನೇಶ್ವರಿ ಪ್ರತಿಮೆ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ವೇದಿಕೆಯಲ್ಲಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರಿಗೆ ಸೂಚಿಸಿದರು.
ಕೃಷಿ ಭೂಮಿ ಖರೀದಿಗೆ ನಿರ್ಬಂಧ:
ರೈತರಲ್ಲದವರು ಕೃಷಿ ಭೂಮಿ ಖರೀದಿ ಮಾಡುವುದಕ್ಕೆ ನಿರ್ಬಂಧ ವಿಧಿಸುವುದಾಗಿ ಘೋಷಿಸಿರುವ ಸಿದ್ದರಾಮಯ್ಯ, ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಆದರೆ ಇವತ್ತು ಉಳುಮೆ ಮಾಡದವನೂ ಕೃಷಿ ಭೂಮಿ ಪಡೆಯುತ್ತಾನೆ.