ಕೊಣನೂರು: ‘ನಮಗೆ ನ್ಯಾಯ ಸಿಗುವವರೆಗೂ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ’ ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಎಸ್.ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ಮೂಲಕ ಹಾದು ಹೋಗಿರುವ ಮಾಗಡಿ- ಸೋಮವಾರಪೇಟೆ ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಸಿದ್ದಾಪುರ ಗೇಟ್ ಸರ್ಕಲ್ನಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯಿಂದ ಮಂಗಳವಾರದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.
‘ರಾಮನಾಥಪುರ ಹೋಬಳಿ ಹಾಗೂ ಕೊಣನೂರು ಹೋಬಳಿಗಳ ವ್ಯಾಪ್ತಿಯಲ್ಲಿ ಕೆಶಿಫ್-3 ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಮಾಗಡಿಯಿಂದ ಸೋಮವಾರಪೇಟೆ ಮಾಡಲಾಗುತ್ತಿದೆ. ಈ ಕಾಮಗಾರಿಯಲ್ಲಿ ಅನೇಕ ಲೋಪದೋಷಗಳು ಇರುವುದರಿಂದ ಅಪಘಾತಕ್ಕೆ ಕಾರಣವಾಗಿದೆ’ ಎಂದು ದೂರಿದರು.