ವಿಜಯಪುರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ, ಇವರು ಕಳ್ಳರಿದ್ದಾರೆ ಎನ್ನುವುದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.
ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ವಿಷಯವನ್ನು ಎತ್ತಿದಾಗ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರಾ?, ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದು ಮತ್ತೆ ಸಿಎಂ ಆಗಿಲ್ವಾ? ಎಂಬ ಪ್ರಶ್ನೆಗಳಿಗೆ ಯತ್ನಾಳ ಈ ರೀತಿ ಪ್ರತಿಕ್ರಿಯಿಸಿದರು. ಈ ಪ್ರಶ್ನೆಯನ್ನು ಕುಮಾರಸ್ವಾಮಿ ಅವರಿಗೆ ಕೇಳಿ. ಪಾಪ ಯಡಿಯೂರಪ್ಪ ಮನೆಯಲ್ಲಿ ಕುಳಿತಿದ್ದಾರೆ. ಅವರು ಹಾದಿಯಲ್ಲಿ ಸಿಗದಿದ್ದರೆ ಅವರ ಮನೆಗೆ ಹೋಗಿ ಕೇಳಿ. ಅವರಿಬ್ಬರ ಬಗ್ಗೆ ನಾ ಯಾಕೆ ಹೇಳಲಿ?, ನನಗೇನು ಕೆಲಸ ಇಲ್ವಾ ಎಂದು ಖಾರವಾಗಿ ನುಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈ ಹಿಂದೆ ಎಲ್.ಕೆ.ಅಡ್ವಾಣಿ ವಿರುದ್ಧ ಕೇವಲ 50 ಲಕ್ಷ ರೂಪಾಯಿ ಆರೋಪ ಕೇಳಿ ಬಂದಿತ್ತು. ಬೊಫೋರ್ಸ್ ಹಗರಣದ ಕುರಿತ ಜೈನ್ ಡೈರಿಯಲ್ಲಿ “ಎಲ್ಕೆಎ” ಎಂದಷ್ಟೇ ಉಲ್ಲೇಖಿಸಲಾಗಿತ್ತು. ಈ ಆರೋಪದಿಂದ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ಮುಕ್ತವಾಗುವವರೆಗೆ ಸಂಸತ್ ಪ್ರವೇಶ ಮಾಡುವುದಿಲ್ಲ ಎಂದು ನಿರ್ಧಾರ ಮಾಡಿದ್ದರು. ಅದು ಆದರ್ಶ. ಅದೇ ರೀತಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಹೊಸ ಮತ್ತು ತಮ್ಮದೇ ಆದ ಆದರ್ಶವಾಗಬೇಕಾದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲವಾದರೆ ಅವರು ಕೂಡಾ ಯಡಿಯೂರಪ್ಪ ರೀತಿಯೇ ಆಗುತ್ತಾರೆ ಎಂದು ಸೂಚ್ಯವಾಗಿ ಹೇಳಿದರು.