ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಕಾರಣ, ಒಂದು ವರ್ಷ ರಾಜ್ಯದಾದ್ಯಂತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ಅಕ್ಟೋಬರ್ 2ರಂದು ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.
‘ಬೆಂಗಳೂರಿನಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆ ವರೆಗೆ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.
500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ: ‘ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಅಂದು ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮತ್ತು ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು’ ಎಂದರು.