ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಪರ ಮುಖ್ಯ ಕಾರ್ಯದರ್ಶಿಯೂ ಆದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು.
ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, ಅರ್ಹರಿಗೆ ಈ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಉಪಕ್ರಮವಹಿಸಲಾಗಿದೆ.
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಹೊಂದಿರುವ ಮಾಹಿತಿ, ದೂರುಗಳು ಗಮನಕ್ಕೆ ಬಂದಿವೆ. ಉಪಸಮಿತಿಯು ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನು ಪರಿಶೀಲಿಸಿ ಸಲಹೆಗಳನ್ನು ಪ್ರಸ್ತಾಪಿಸಲಿದೆ ಎಂದು ತಿಳಿಸಿದರು.
ಆಡಳಿತದಲ್ಲಿ ಸುಧಾರಣೆ, ಸರಳೀಕರಣ, ನಾಗರಿಕ ಸೇವೆಗಳ ತ್ವರಿತ ವಿಲೇವಾರಿ ದೃಷ್ಟಿಯಿಂದ ಉತ್ತರಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸಿದೆ. ಸಾರ್ವಜನಿಕರಿಂದಲೂ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಮುಂಚೂಣಿ ಇಲಾಖೆಗಳ ತಳಹಂತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ, ಕೆಲಸದ ಹೊರೆ ಹೆಚ್ಚಿರುವ ಜಿಲ್ಲೆಗಳಿಗೆ ಮರು ನಿಯೋಜನೆ, ಅನಗತ್ಯವೆಂದು ಪರಿಗಣಿತ ಲಿಪಿಕ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಾಗಿ ಪರಿವರ್ತಿಸಲು ಸಲಹೆ ನೀಡಲಾಗಿದೆ.
ಮುಖ್ಯಮಂತ್ರಿ, ಸಚಿವರು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಜತೆಗೆ ಕ್ರಮಗಳ ಬಗ್ಗೆ ವಿಚಾರ ವಿನಿಮಯ ನಡೆಸಲಾಗಿದೆ. ಸಣ್ಣ, ಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು, ದಕ್ಷತೆ ಹೆಚ್ಚಿಸಲು 19 ಇಲಾಖೆಗಳಿಗೆ ಸಂಬಂಧಿಸಿದ 2871 ಶಿಾರಸುಗಳನ್ನು ಮಾಡಲಾಗಿದೆ.