ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ಕೊಟ್ಟು ಪ್ರತ್ಯೇಕವಾಗಿ ಚರ್ಚಿಸಿದರು.
ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳು ಹಾಗೂ ದಲಿತ ಮುಖ್ಯಮಂತ್ರಿ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.
ಸೋಮವಾರ ಶ್ರೀರಂಗಪಟ್ಟಣ ದಸರಾದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಮಂಗಳವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಸಮಾಜಕಲ್ಯಾಣ ಸಚಿವ ಮಹದೇವಪ್ಪ ನಿವಾಸಕ್ಕೆ ಭೇಟಿ ನೀಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು.
ಅವರ ಭೇಟಿ ಕುರಿತು ಪ್ರತಿಕ್ರಿಯಿಸಿದ ಶಾಸಕ ಹರೀಶ್ ಗೌಡ, ‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಈವರೆಗೆ ನಮ್ಮಲ್ಲಿ ಚರ್ಚೆ ನಡೆದಿಲ್ಲ. ಜಾರಕಿಹೊಳಿ ನಮ್ಮ ನಾಯಕರಾಗಿದ್ದು, ಸೌಜನ್ಯದ ಭೇಟಿ ನೀಡಿದ್ದಾರೆ. ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ’ ಎಂದರು.