ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಮುಡಾ ಹಗರಣ ಅಧ್ಯಕ್ಷ ಮರಿಗೌಡ ತಲೆದಂಡ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಇಂದು ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ(K Marigowda)ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಬಳಿಕ ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮುಡಾ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಒತ್ತಡ ಹಾಕಿಲ್ಲ: ಮರಿಗೌಡ
ರಾಜೀನಾಮೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮರಿಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ದರು. ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ, ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ವಿಚಾರದಲ್ಲೂ ಸಿಎಂ ಸಿದ್ದರಾಮಯ್ಯ ಒತ್ತಡ ಹಾಕಿಲ್ಲ ಎಂದು ಹೇಳಿದ್ದಾರೆ.