ವಿಜಯಪುರ ಜಿಲ್ಲೆಯಲ್ಲಿನ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದು, ಹಲವು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡಿದ್ದ ಭೂಮಿಯು ವಕ್ಫ್ ಬೋರ್ಡ್ಗೆ ಸೇರಿದ್ದು ಎಂದು ನೋಟಿಸ್ನಲ್ಲಿ ತಿಳಿಸಿದೆ. ಇದೇ ವಿಚಾರವಾಗಿ ವಕ್ಫ್ ಹಾಗೂ ರೈತರ ನಡುವೆ ಜಟಾಪಟಿ ಮುಂದುವರಿದಿದೆ.
ಮತ್ತೊಂದೆಡೆ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ.
ವಕ್ಫ್ ಬೋರ್ಡ್ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಸಚಿವರಾದ ಎಂ.ಬಿ.ಪಾಟೀಲ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರೈತರಿಗೆ ಸೇರಿದ ಜಮೀನಲ್ಲಿ ಒಂದಿಂಚು ಕೂಡ ಯಾರ ವಶವೂ ಆಗಲು ಬಿಡುವುದಿಲ್ಲ ಎಂದು ರೈತರಿಗೆ ಅಭಯ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
Laxmi News 24×7