ಕನಕಪುರ:* ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಭಾನುವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿಯನ್ನು ತುಂಬಿದರು. ಇದೀಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.
ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.