ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು.
ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಣಂತಿಯರ ಸರಣಿ ಸಾವಾಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದಾರೆ. ವದ್ಯರು, ಬಾಣಂತಿಯರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಕೈ ತೊಳೆದುಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ಅದರೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಜಿಲ್ಲೆಯ ಜನಪ್ರತಿನಿಧಿಗಳು ಎಚ್ಚರಿಸುತ್ತಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
ಬಾಣಂತಿಯರ ಸಾವಿನ ಕೂಪವಾದ ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳು
ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳು ಅಕ್ಷರಶಃ ಬಾಣಂತಿಯರ ಸಾವಿನ ಕೂಪವಾಗಿವೆ. ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಬುಧವಾರ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದಾಳೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್ಪುರ ಗ್ರಾಮದ ಮಹಾಲಕ್ಷ್ಮಿ (20) ಎಂಬ ಗರ್ಭಿಣಿ, ರವಿವಾರ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿಯೇ ಮಹಾಲಕ್ಷ್ಮಿಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವ ಹಾಗೂ ನಂಜಾಗಿ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದರೆ, ಇತ್ತ ತಾಯಿ ಕಳೆದುಕೊಂಡ ಮಗು ಮುಖನೋಡಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಹೆರಿಗೆ ವೇಳೆ ಏನೋ ವ್ಯತ್ಯಾಸವಾಗಿದೆ, ಇದರಿಂದ ವೈದ್ಯರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು ಅಂತಾ ಒತ್ತಾಯಿಸಿದ್ದಾರೆ.