ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್ಐಆರ್ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ.
ದೂರುದಾರ ಸಲ್ಲಿಸಿರುವ ಅಧಿಕಾರಿ ಮತ್ತು ದೂರುದಾರನ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಚಿವರ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಚಾರ ಇಟ್ಟುಕೊಂಡು ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಲಂಚದಲ್ಲಿ ಸಚಿವರಿಗೂ ಪಾಲು: ಜೆಡಿಎಸ್ ವಾಗ್ದಾಳಿ
ಬಾರ್ ಲೈಸೆನ್ಸ್ನಲ್ಲಿಯೂ ಲಂಚ ವಸೂಲಿ ನಡೆಯುತ್ತಿದೆ. ಸಚಿವರ ಮುಂದಾಳತ್ವದಲ್ಲೇ ಅಧಿಕಾರಿಗಳು ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.