ಬೆಳಗಾವಿ: ಕಲ್ಯಾಣ ಕರ್ನಾಟಕ ಮಾದರಿಯಲ್ಲೇ ಕಿತ್ತೂರು ಕರ್ನಾಟಕ ಅಭಿವೃದ್ಧಿಗೂ 371 ಜೆ ವಿಶೇಷ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸುವ ನಿರ್ಣಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಶಾಸಕ ಎನ್. ಹೆಚ್. ಕೋನರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಅವರು, ಕಿತ್ತೂರು ಕರ್ನಾಟಕ ತುಂಬಾ ಹಿಂದುಳಿದಿದೆ. ಕಲ್ಯಾಣ ಕರ್ನಾಟಕದವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಇಟ್ಟುಕೊಳ್ಳಬೇಕು ಎಂದರು.
ಬೆಣ್ಣೆ ಹಳ್ಳದ ಪ್ರವಾಹದಿಂದ ನಾಲ್ಕು ತಾಲೂಕು ಪ್ರವಾಹಕ್ಕೆ ಸಿಲುಕುತ್ತವೆ. ಡಾ.ಪರಮಶಿವಯ್ಯ ಅವರ ವರದಿಯಂತೆ ಬೆಣ್ಣೆ ಹಳ್ಳದ ಪ್ರವಾಹ ತಗ್ಗಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯೋಜನೆ 2013 ರಲ್ಲಿ ಪ್ರಾರಂಭವಾದರೂ ಈಗ ಟೆಂಡರ್ ಕರೆಯುವ ಹಂತಕ್ಕೆ ಬಂದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ ಎಲ್ಲಾ ಬಗೆಯ ರಸ್ತೆಗಳು ಹಾಳಾಗಿವೆ. ಬೆಳಗಾವಿಯ ಅಧಿವೇಶನ ಕೇವಲ ಪ್ರತಿಭಟನೆಗೆ ಸೀಮಿತವಾಗದೇ ಪಕ್ಷಾತೀತವಾಗಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವಂತಹ ಕಾರ್ಯವಾದರೆ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಶಿಕ್ಷಣ, ನೀರಾವರಿ, ಸಾರಿಗೆ ಸೇರಿದಂತೆ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಬಗ್ಗೆ ವರದಿ ಪಡೆಯಬೇಕು. ಆ ವರದಿ ಆಧರಿಸಿ ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವಂತಾಗಬೇಕು ಎಂಬ ಸಲಹೆ ನೀಡಿದರು.ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ಸಚಿವರು ಸಮಸ್ಯೆಗಳನ್ನು ಕೇಳುವುದೂ ಇಲ್ಲ, ಬಗೆಹರಿಸುವುದೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Laxmi News 24×7