ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಷ್ಟೇ ಅಲ್ಲದೆ ರಾಜಕೀಯವಾಗಿಯೂ ಅನ್ಯಾಯವಾಗಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ದಕ್ಷಿಣ ಕರ್ನಾಟಕದ ವಿಚಾರವಾಗಿ ಅಸಹನೆ ವ್ಯಕ್ತಪಡಿಸುತ್ತಿಲ್ಲ. ಆದರೆ ಸಮಾನ ಅಭಿವೃದ್ಧಿ ಆಗಬೇಕು. ಗ್ಯಾರಂಟಿ ನೀಡುವ ಬದಲಾಗಿ ನೀರಾವರಿ ಕಲ್ಪಿಸಿ ಎಲ್ಲಾ ಕೈಗಳಿಗೆ ಉದ್ಯೋಗ ಕೊಡಿ. ಸಚಿವ ಸಂಪುಟ ಸಭೆಯಲ್ಲಿರುವ ಸಚಿವರಲ್ಲೂ ಮೂರ್ನಾಲ್ಕು ಮಂದಿಯಷ್ಟೇ ಚರ್ಚೆಯಲ್ಲಿ ತೊಡಗಿಸಿಕೊಳ್ಳುತಾರೆ. ಉಳಿದವರು ಮೌನಿಗಳು. ಸುವರ್ಣಸೌಧವನ್ನು ಕೋಟ್ಯಂತರ ರೂ. ಖರ್ಚು ಮಾಡಿ ಕಟ್ಟಿಸಲಾಗಿದೆ. ಯಾವ ಕಚೇರಿಯೂ ಇಲ್ಲಿಗೆ ಸ್ಥಳಾಂತರಗೊಂಡಿಲ್ಲ. ಕೃಷ್ಣಾ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಲ್ಲಿಗೆ ಪ್ರವಾಸಕ್ಕೆ ಬಂದಂತೆ ಬಂದು ಹೋಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕ ಭಾಗಕ್ಕೆ ತನ್ನದೇ ಆದ ವೈಭೋಗವಿದೆ. ಕರಾವಳಿ ಭಾಗಕ್ಕೆ ಹೆಚ್ಚು ಆದಾಯ ಇದೆ. ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಬರಕ್ಕೆ ತುತ್ತಾಗಿ ತುತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿಯಲ್ಲಿರುವ ಕುಟುಂಬಗಳಿವೆ ಎಂದು ಹೇಳಿದರು.
Laxmi News 24×7