ಬೆಳಗಾವಿ: ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಮೆರವಣಿಗೆಗೆ ಇಂದು ಬೆಳಗ್ಗೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾನಪದ ಕಲಾವಾಹಿನಿಗಳು, ಕಲಾತಂಡಗಳು ಗಮನ ಸೆಳೆದವು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾದ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ರಾಯಣ್ಣನ ಪ್ರತಿಮೆಗೆ ಪ್ರಾತಃಕಾಲದಲ್ಲಿ ಪೂಜೆ ಸಲ್ಲಿಸಲಾಯಿತು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರು, ರಾಜ್ಯದ ವಿವಿಧೆಡೆ ಸಂಚರಿಸಿ ಸಂಗೊಳ್ಳಿಗೆ ಆಗಮಿಸಿದ ಜ್ಯೋತಿಯನ್ನು ಬರಮಾಡಿಕೊಂಡರು. ಬಳಿಕ ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ ಅವರು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು.ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.
ಕುಂಭ ಹೊತ್ತ ಮಹಿಳೆಯರು, ಪೂಜಾಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆಕುಣಿತ, ಸೇರಿದಂತೆ ವಿವಿಧ ಕಲಾತಂಡಗಳು ಉತ್ಸವಕ್ಕೆ ಮೆರುಗು ತಂದವು. ವಾದ್ಯಗಳ ಕರತಾಡನ, ನೃತ್ಯದ ಸೊಬಗು ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು.
Laxmi News 24×7