ಕಾರವಾರ): ಮುಂಡಗೋಡದ ಉದ್ಯಮಿ ಅಪಹರಣ ಪ್ರಕರಣ ಸಂಬಂಧ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಮತ್ತು ಇನ್ನು ಮೂವರನ್ನು ಬೆನ್ನಟ್ಟಿ ಬಂಧಿಸಲಾಗಿದೆ.
ಜಮೀರ್ ಅಹ್ಮದ್ ದುರ್ಗಾವಾಲೆ ಎಂಬವರನ್ನು ಅಪಹರಿಸಿದ್ದ ಆರೋಪಿಗಳಾದ ರಹೀಮ್ ಅಲ್ಲಾಹುದ್ದೀನ್ ಹಾಗೂ ಅಜಯ್ ಮಡ್ಲಿ ಎಂಬವರಿಗೆ ಗುಂಡು ಹಾರಿಸಲಾಗಿದೆ.
ಗಾಯಗೊಂಡಿರುವ ಆರೋಪಿಗಳಿಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡಗೋಡ ಠಾಣಾ ಸಿಪಿಐ, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್ಟೇಬಲ್ಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಮೀರ್ ಅಹ್ಮದ್ ದುರ್ಗಾವಾಲೆ ಎಂಬವರನ್ನು ಗುರುವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ, 35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.
ಇದರ ನಡುವೆ ಅಪಹರಣಕಾರರು ಗದಗ ಜಿಲ್ಲೆಯ ಟೋಲ್ ಬಳಿ ಜಮೀರ್ ಅವರನ್ನು ಬಿಟ್ಟು ಪರಾರಿಯಾಗಿದ್ದರು. ನಂತರ ಪೊಲೀಸರು ಬಂಧಿಸಲು ಹೋದಾಗ ಆರೋಪಿಗಳು ದಾಳಿಗೆ ಮುಂದಾಗಿದ್ದರು. ಇದರಿಂದಾಗಿ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿ ಒಟ್ಟು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Laxmi News 24×7