ಹುಬ್ಬಳ್ಳಿ: ಹೊಸ ರೂಪ ಪಡೆದ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ ಇಂದು ಲೋಕಾರ್ಪಣೆ ಆಯಿತು. ಹೈಟೆಕ್ ಸ್ಪರ್ಶದ ಪಡೆದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಸೋಮವಾರದಿಂದ (ಜ.13) ಸಾರಿಗೆ ಸೇವೆ ಸಿಗಲಿದೆ.
ಹಳೇ ಬಸ್ ನಿಲ್ದಾಣದ ಆವರಣದಲ್ಲಿ ಹುಬ್ಬಳ್ಳಿ – ಧಾರವಾಡ ಸ್ಮಾರ್ಟ್ ಸಿಟಿ ಅನುದಾದಡಿಯಲ್ಲಿ ಹಳೇ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಳೇ ಬಸ್ ನಿಲ್ದಾಣವನ್ನು ಹೊಸದಾಗಿ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಸುಸಜ್ಜಿತವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.ಅಭಿವೃದ್ಧಿ ದೃಷ್ಟಿಕೋನ ಮುಂದಿಟ್ಟುಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕಾಗುತ್ತದೆ.
ಇದೇ ತಿಂಗಳಲ್ಲಿ ಹೊಸುರು ವೃತ್ತದ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. 2051 ಕ್ಕೆ ಶೇ.50 ರಷ್ಟು ನಗರಗಳು ಅಭಿವೃದ್ಧಿ ಹೊಂದಬೇಕು ಎಂಬ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ಭಾರತ ದೇಶ ಬೆಳೆಯುತ್ತಿದ್ದು, ಹೂಡಿಕೆಯಲ್ಲಿ ಸಹ ಮುನ್ನುಗ್ಗುತ್ತಿದೆ. ಎಫ್ಡಿಐ ಹೆಚ್ಚಳ ಆಗುತ್ತಿದೆ. 180 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದ್ದು, ಅದನ್ನು ಸುಸಜ್ಜಿತವಾಗಿ ನಿರ್ವಹಣೆ ಮಾಡುವುದೇ ಸವಾಲಾಗಿ ಪರಿಣಮಿಸಿದೆ.
ನಗರ ಸಾರಿಗೆ, ಕುಡಿಯುವ ನೀರು, ಸ್ಥಳೀಯ ಸಾರಿಗೆ ಹಾಗೂ ವಿದ್ಯುತ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ತೋಳನಕೆರೆಯನ್ನು ಸಹ ಅಭಿವೃದ್ಧಿ ಮಾಡಲಾಗಿದೆ. ಇಂದಿರಾ ಗಾಜಿನ ಮನೆ ಉದ್ಯಾನವನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದರಿಂದ ಹಾಳಾಗುತ್ತಿದೆ. ಹೀಗಾಗಿ ಯೋಜನೆಗಳು ಲೋಕಾರ್ಪಣೆಗೊಂಡ ಬಳಿಕ ಅವುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದರು.
Laxmi News 24×7