ಬೆಳಗಾವಿ: ಬನದ ಹುಣ್ಣಿಮೆ ನಿಮಿತ್ತ ಸೋಮವಾರ ವೈಭವದ ಜಾತ್ರೆಗೆ ಸವದತ್ತಿ ಏಳುಕೊಳ್ಳದ ತಾಯಿ ವಾಸಸ್ಥಾನ ಯಲ್ಲಮ್ಮನಗುಡ್ಡ ಸಾಕ್ಷಿಯಾಯಿತು. 10 ಲಕ್ಷಕ್ಕೂ ಅಧಿಕ ಭಕ್ತರು ಭಕ್ತಿಯ ಹೊಳೆ ಹರಿಸಿದರು. ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಯಲ್ಲಮ್ಮದೇವಿ ದರ್ಶನ ಪಡೆದು ಪುನೀತರಾದರು.
ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಭಾನುವಾರದಿಂದಲೇ ಯಲ್ಲಮ್ಮನ ಗುಡ್ಡದತ್ತ ಪ್ರಯಾಣ ಬೆಳೆಸಿದ್ದರು. ಸೋಮವಾರ ಬೆಳಗ್ಗೆ ಯಲ್ಲಮ್ಮನಗುಡ್ಡದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಕಣ್ಣು ಹಾಯಿಸಿದಲ್ಲೆಲ್ಲಾ ಜನವೋ ಜನ ಕಂಡು ಬಂದರು. ಬೆಳಗ್ಗೆ ಮತ್ತು ಸಂಜೆ ಯಲ್ಲಮ್ಮ ದೇವಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿದ ದೇವಿಗೆ ವಿವಿಧ ಕಾಣಿಕೆ ಸಮರ್ಪಿಸಿ ಭಕ್ತಿ ಪರಾಕಾಷ್ಠೆ ಮೆರೆದರು.
ತಲೆ ಮೇಲೆ ಕೊಡ ಹೊತ್ತು ಜೋಗತಿಯರು ಹೆಜ್ಜೆ ಹಾಕಿದರೆ, ಭಂಡಾರ ಹಾರಿಸಿ ಭಕ್ತರು ಕುಣಿದಾಡಿದರು. ಇನ್ನು ಕಲಾವಿದರು ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸಿ ಜಾತ್ರೆಯ ಮೆರಗು ಹೆಚ್ಚಿಸಿದರು.
ಇನ್ನು ಮಲಪ್ರಭಾ ನದಿ ದಡದಲ್ಲಿರುವ ಜೋಗುಳಬಾವಿ ಸತ್ಯೆಮ್ಮ ದೇವಿ ಸನ್ನಿಧಿಯಲ್ಲಿ ಹಾಗೂ ಯಲ್ಲಮ್ಮ ದೇವಸ್ಥಾನ ಬಳಿಯ ಎಣ್ಣೆ ಹೊಂಡದಲ್ಲಿ ಭಕ್ತರು ಪವಿತ್ರಸ್ನಾನ ಮಾಡಿದರು. ದೇವಸ್ಥಾನದ ಮೂಲ ಅರ್ಚಕರ ಮನೆಗಳಲ್ಲೇ ತಂಗಿದ ಭಕ್ತರು, ಶ್ರದ್ಧಾ – ಭಕ್ತಿಯಿಂದ ದೇವಿಯನ್ನು ಸ್ಮರಿಸಿದರು. ಬಂದಿದ್ದ ಮಹಿಳಾ ಭಕ್ತರು ರಸ್ತೆಬದಿಯೇ ಒಲೆ ಹೂಡಿ, ಕಡಬು, ಹೋಳಿಗೆ, ಖರ್ಚಿಕಾಯಿ, ಗಾರ್ಗಿ, ಬದನೆಕಾಯಿ, ಮಡಿಕೆ ಕಾಳು, ಅನ್ನ- ಸಾರು, ವಡೆ ಸೇರಿ ಮತ್ತಿತರ ಖಾದ್ಯಗಳನ್ನು ತಯಾರಿಸಿದರು. ಬಳಿಕ ಜೋಗತಿಯರ ನೇತೃತ್ವದಲ್ಲಿ ಪರಡಿ ತುಂಬಿ ನೈವೇದ್ಯ ಅರ್ಪಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರೆಲ್ಲ ಒಟ್ಟಾಗಿ ಕುಳಿತು, ಮೃಷ್ಟಾನ್ನ ಭೋಜನ ಸವಿದು ಸಂಭ್ರಮಿಸಿದರು.
Laxmi News 24×7