ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪ್ರತ್ಯೇಕ ಗೌರವ ಡಾಕ್ಟರೇಟ್ ಘೋಷಿಸಿವೆ.
92 ವರ್ಷ ವಯಸ್ಸಿನ ಕಾಗೋಡು ತಿಮ್ಮಪ್ಪನವರಿಗೆ ಜ.22ರ ಬೆಳಗ್ಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಅದೇ ದಿನ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಮಧ್ಯಾಹ್ನ ರಾಜ್ಯಪಾಲರು ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಇದರೊಂದಿಗೆ ಒಂದೇ ದಿನ ಕಾಗೋಡು ತಿಮ್ಮಪ್ಪನವರು ಎರಡು ಗೌರವ ಡಾಕ್ಟರೇಟ್ ಸ್ವೀಕರಿಸಲಿದ್ದಾರೆ.
ಕುವೆಂಪು ವಿವಿಯ 34 ಘಟಿಕೋತ್ಸವದ ಕುರಿತು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ಜ.22ರಂದು ಬೆಳಗ್ಗೆ ವಿವಿಯ ಬಸವ ಸಭಾ ಭವನದಲ್ಲಿ ಘಟಿಕೋತ್ಸವ ನಡೆಯಲಿದೆ. ಘಟಿಕೋತ್ಸವದಲ್ಲಿ ಕಾಗೋಡು ತಿಮ್ಮಪ್ಪ ಸೇರಿ ಮೂವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಸಮಾಜ ಸೇವೆಗಾಗಿ ಕಾಗೋಡು ತಿಮ್ಮಪ್ಪ ಅವರಿಗೆ, ವಿಜ್ಞಾನಿ ಪ್ರೊ. ಸಿ.ಎಸ್. ಉನ್ನಿ ಕೃಷ್ಣನ್ ಹಾಗೂ ಭದ್ರಾವತಿಯ ಯೋಗ ಗುರು ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ವಿವಿಯಿಂದ 115 ಪುರುಷರು ಹಾಗೂ 89 ಮಹಿಳೆಯರು ಸೇರಿ ಒಟ್ಟು 204 ಅಭ್ಯರ್ಥಿಗಳಿಗೆ ಪಿಹೆಚ್ಡಿ ಪ್ರದಾನ ಮಾಡಲಾಗುತ್ತದೆ. 6,872 ವಿದ್ಯಾರ್ಥಿಗಳು ಹಾಗೂ 12,013 ವಿದ್ಯಾರ್ಥಿನಿಯರು ಸೇರಿ ಒಟ್ಟು 18,885 ವಿದ್ಯಾರ್ಥಿಗಳಿಗೆ ಪದವಿಗೆ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Laxmi News 24×7