ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಇಂದು ನಗರದ ಬಿವಿಬಿ ಕಾಲೇಜಿನಲ್ಲಿ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, “ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಎರಡು ಗಂಟೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಸುರಕ್ಷಿತವಾಗಿ ಹಣವನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಕೊಂಡೊಯ್ಯುವುದಕ್ಕೆ ಏನೇನು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ಸೆಕ್ಯೂರಿಟಿ ಆಡಿಟ್ ರೀತಿ ಮಾಡಲಾಯಿತು. ಸಭೆಯಲ್ಲಿ 250ಕ್ಕೂ ಹೆಚ್ಚು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರಿಗೆ ಆರ್ಬಿಐ ಗೈಡ್ಲೈನ್ಸ್ ಪ್ರಕಾರ, ಏನೆಲ್ಲಾ ನಿಯಮಗಳನ್ನು ಪಾಲಿಸಬೇಕು” ಎಂಬ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
“ರಾಜ್ಯದಲ್ಲಿ ಇತ್ತೀಚಿಗೆ ನಡೆದ ಎರಡು ದರೋಡೆ ಪ್ರಕರಣಗಳಿಂದಾಗಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಹಣ ಕೊಂಡೊಯ್ಯುವಾಗ ಭದ್ರತೆ ಇರಬೇಕು ಮತ್ತು ನಮ್ಮ ಹಿರಿಯ ಅಧಿಕಾರಿಗಳು ಪೊಲೀಸರು ಹೆಚ್ಚು ಇರಬೇಕು ಹಾಗೂ ಚೆಕ್ಪೋಸ್ಟ್ ಗಳನ್ನು ಹೆಚ್ಚು ಹಾಕಬೇಕು, ಹಣ ಕೊಂಡೊಯ್ಯುವ ಸಂದರ್ಭದಲ್ಲಿ ಪೊಲೀಸರು ಹೇಗೆ ಭದ್ರತೆ ಒದಗಿಸಬೇಕು ಎಂಬ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಂತಹ ಘಟನೆಗಳನ್ನು ಧಾರವಾಡ ಜಿಲ್ಲೆಯಲ್ಲಿ ನಡೆಯದಂತೆ ಮಾಡಲು ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಭೆಯಲ್ಲಿ ಚರ್ಚಿಸಲಾಯಿತು” ಎಂದರು.
Laxmi News 24×7