ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು.
ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಅಪ್ಪಳಿಸಿದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಯಲ್ಲಿ ಮುಳುಗಿ ಬೆಳಗಾವಿ ಬಾಲಕ ಸಾವು: ಕೆರೆಗೆ ಈಜಲು ಹೋಗಿದ್ದ 15 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘ್ವಾಡೆ ಗ್ರಾಮದಲ್ಲಿ ನಡೆದಿದೆ.
ಗಣೇಶ ಸುತಾರ (15) ಮೃತ ದುರ್ದೈವಿ ಬಾಲಕಿ. ಮೃತ ಬಾಲಕ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜೊತೆಗೆ ಈಜಲು ಕೆರೆಗೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಗಣೇಶನ ಮೃತದೇಹ ಹೊರತೆಗೆಯುತ್ತಿದ್ದಂತೆ ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7