ಬೆಂಗಳೂರು : ಶ್ರೀರಾಮುಲು ಅವರಿಗೆ ಬಿಜೆಪಿಯು ರಾಜ್ಯಸಭಾ ಸದಸ್ಯತ್ವ ನೀಡಿ, ಕೇಂದ್ರ ಸಚಿವರನ್ನಾಗಿ ಮಾಡದಿದ್ದರೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ವಾಲ್ಮೀಕಿ ಸಮುದಾಯವು ಬಿಜೆಪಿಯನ್ನು ಬಾಯ್ಕಾಟ್ ಮಾಡಬೇಕಾಗುತ್ತೆ ಎಂದು ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ ಚಳವಳಿ ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.
ವಾಲ್ಮೀಕಿ ಸ್ವಾಭಿಮಾನಿ ಸಂಘ, ಜೈ ಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿ, ಶ್ರೀರಾಮುಲು ಅಭಿಮಾನಿ ಬಳಗ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಒಂದು ವಾರದೊಳಗೆ ಜನಾರ್ದನ್ ರೆಡ್ಡಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡದೇ ಹೋದಲ್ಲಿ ಉಗ್ರ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ. ಶ್ರೀರಾಮುಲು ಅವರಿಗೆ ಮಾಡಿದ ಅನ್ಯಾಯಕ್ಕೆ ಪರಿಹಾರವಾಗಿ ಬಿಜೆಪಿಯು ಅವರನ್ನು ಕೇಂದ್ರದ ಮಂತ್ರಿ ಮಾಡಲಿ, ಬಿಜೆಪಿಯ ಇತಿಹಾಸದಲ್ಲೇ ವಾಲ್ಮೀಕಿ ಸಮುದಾಯದ ನಾಯಕರೊಬ್ಬರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ ಉದಾಹರಣೆಯಿಲ್ಲ. ಈಗಲಾದರೂ ನಮ್ಮ ಸಮುದಾಯಕ್ಕೆ ನ್ಯಾಯ ಕೊಡಲಿ ಎಂದು ಅವರು ಒತ್ತಾಯಿಸಿದರು.
ಸಂಡೂರು ಉಪಚುನಾವಣೆಯಲ್ಲಿ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಜನಾರ್ದನ ರೆಡ್ಡಿ ಹೊರಬೇಕಿತ್ತು. ಆದರೆ, ತಮ್ಮ ತಪ್ಪನ್ನು ಮರೆಮಾಚಲು ಶ್ರೀರಾಮುಲು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ರಾಮುಲು ಅವರು ಸಂಡೂರಿನಲ್ಲಿ ಪ್ರಚಾರ ಮಾಡದೇ ಹೋಗಿದ್ದರೆ, ಬಿಜೆಪಿ ಬರೀ ಸೋಲಲ್ಲ, ಹೀನಾಯ ಸೋಲು ಅನುಭವಿಸಬೇಕಿತ್ತು ಎಂದರು.
Laxmi News 24×7