ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ.
ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆಯೇ?, ಸಾಂವಿಧಾನಿಕ ನ್ಯಾಯಾಲಯ (ಹೈಕೋರ್ಟ್, ಸುಪ್ರೀಂ ಕೋರ್ಟ್)ಗಳು ಯಾವ ಸಂದರ್ಭದಲ್ಲಿ ತನಿಖೆ, ಮರು ತನಿಖೆಗೆ ಸಿಬಿಐಗೆ ವಹಿಸಿವೆ?, ಯಾವ ಪ್ರಕರಣದಲ್ಲಿ ನಿರಾಕರಿಸಿವೆ?, ಲೋಕಾಯುಕ್ತ ನಡೆಸಿದ ತನಿಖೆಗಳ ದಾಖಲೆಗಳನ್ನು ಪರಿಶೀಲಿಸಿ ಮರು ತನಿಖೆಗಾಗಿ ವರ್ಗಾಹಿಸಲು ಅರ್ಹವಾಗಿವೆಯೇ? ಎಂಬ ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡು, ಅವುಗಳಿಗೆ ಉತ್ತರಿಸಿ ಈ ಆದೇಶಿಸಿದೆ.
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಈಗಾಗಲೇ ಹಲವು ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಲೋಕಾಯುಕ್ತ ಸಂಸ್ಥೆಯು ಬಾಹ್ಯ ಪ್ರಭಾವಗಳಿಂದ ಸ್ವಾತಂತ್ರ್ಯ ಮತ್ತು ರಕ್ಷಣೆ ಹೊಂದಿದೆ ಎಂಬುದು ಸ್ಪಷ್ಟಪಡುತ್ತದೆ. ಹಾಲಿ ಮುಖ್ಯಮಂತ್ರಿಯ ವಿರುದ್ಧದ ಅಪರಾಧವನ್ನು ತನಿಖೆ ಮಾಡಲು ಲೋಕಾಯುಕ್ತ ಸಂಸ್ಥೆ ಸಮರ್ಥವಾಗಿದೆ. ಭೂತಕಾಲವು ಚೆನ್ನಾಗಿದ್ದರೆ, ವರ್ತಮಾನವು ದೋಷಪೂರಿತವಾಗಿದೆ ಎಂದು ಕಂಡುಹಿಡಿಯಲಾಗುವುದಿಲ್ಲ. ಲೋಕಾಯುಕ್ತವು ಸ್ವತಂತ್ರ ಸಂಸ್ಥೆಯಾಗಿದ್ದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಸಮರ್ಥವಾಗಿರುತ್ತದೆ ಎಂದು ಪೀಠ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸಿರುವ ತನಿಖಾ ವರದಿಯನ್ನು ಪರಿಶೀಲಿಸಿದಾಗ, ತನಿಖೆಯು ಲೋಪದೋಷಗಳಿಂದ ಅಥವಾ ಪಕ್ಷಪಾತದಿಂದ ಕೂಡಿದೆ ಎಂದು ಕಂಡುಬಂದಿಲ್ಲ. ಹೀಗಾಗಿ, ಪ್ರಕರಣವನ್ನು ಮುಂದುವರಿದ ತನಿಖೆಗಾಗಿ ಅಥವಾ ಮರು ತನಿಖೆ ನಡೆಸುವುದಕ್ಕಾಗಿ ಸಿಬಿಐಗೆ ಆದೇಶಿಸಲು ಅಗತ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಲೋಕಾಯುಕ್ತ ಬಾಹ್ಯಶಕ್ತಿಗಳ ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಅರ್ಜಿದಾರರು ವ್ಯಕ್ತಪಡಿಸಿರುವ ಅನುಮಾನಗಳಿಗೆ ಈಗಾಗಲೇ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳು ತಮ್ಮ ತೀರ್ಪುಗಳಲ್ಲಿ ಉತ್ತರ ನೀಡಿವೆ. ಲೋಕಾಯುಕ್ತ ಮತ್ತು ಲೋಕಾಯುಕ್ತ ಸಂಸ್ಥೆಯು ಪ್ರಶ್ನಾರ್ಹ ಸ್ವಾತಂತ್ರ್ಯದಿಂದೇನೂ ಬಳಲುತ್ತಿಲ್ಲ. ಅರ್ಜಿದಾರರು ಕೋರಿರುವ ಸಿಬಿಐ ತನಿಖೆಯೇ ಪರಿಹಾರವಲ್ಲ. ಈ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
Laxmi News 24×7