ಬೆಂಗಳೂರು,: ನಗರದಲ್ಲಿ ಕುಡಿಯುವ ನೀರಿನ ಕೊರತೆಯನ್ನು ತಪ್ಪಿಸಲು ಜಲಮಂಡಳಿ (BWSSB) ಇತ್ತೀಚೆಗೆ ಹೊಸ ಆದೇಶ ಹೊರಡಿಸಿತ್ತು. ಆ ಮೂಲಕ ಕುಡಿಯುವ ನೀರನ್ನು ವ್ಯರ್ಥಮಾಡಿದ್ದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿತ್ತು. ಆದರೂ ಸಿಲಿಕಾನ್ ಸಿಟಿಯ ಕೆಲ ಜನರು ಕುಡಿವ ನೀರು ವ್ಯರ್ಥಮಾಡಿದ ಹಿನ್ನಲೆ ದಂಡಾಸ್ತ್ರ ಪ್ರಯೋಗ ಮಾಡಲಾಗಿದೆ. ಆ ಮೂಲಕ ಬೇಸಿಗೆ ಆರಂಭದಲ್ಲೇ ಬೆಂಗಳೂರು ಜನತೆಗೆ ಜಲಮಂಡಳಿ ಶಾಕ್ ನೀಡಿದೆ.
ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ ಪ್ರಯೋಗ ಮಾಡಿದೆ. 112 ಕೇಸ್ ದಾಖಲಾಗಿದ್ದು, 5.60 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ. ಕುಡಿವ ನೀರು ವ್ಯರ್ಥಮಾಡದಂತೆ BWSSB ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು. ಆ ಮೂಲಕ ಇದೀಗ ಆದೇಶ ಉಲ್ಲಂಘಿಸಿದವರಿಂದ ತಲಾ 5 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ ಕುಡಿಯುವ ನೀರಿನ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು.
Laxmi News 24×7