ಮಂಡ್ಯ : ಪುಡಿ ರೌಡಿಗಳ ಅಟ್ಟಹಾಸ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂರು ಪ್ರಕರಣಗಳಲ್ಲಿ 17 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಗುಂಡೇಟು ನೀಡಿದ್ದಾರೆ.
ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಭಾಷ್ ಅಲಿಯಾಸ್ ಸುಬ್ಬು ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಸಮೀಪ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಬಂಧಿಸಲಾಗಿದೆ. ಈತ ಬಿ.ಹೊಸೂರು ಸಮೀಪ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿತ್ತು. ಪೊಲೀಸರು ಬಂಧನಕ್ಕೆ ತೆರಳಿದ್ದಾಗ ಅವರ ಮೇಲೆಯೇ ಆತ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಮಂಡ್ಯ ಪೂರ್ವ ಠಾಣೆ ಪಿಎಸ್ಐ ಶೇಷಾದ್ರಿ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣಗಳ ಬಗ್ಗೆ ಮಂಡ್ಯದಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ”ಮಂಡ್ಯದಲ್ಲಿ ಕೆಲವರು ಲಾಂಗ್, ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ತನಿಖೆ ಮಾಡುತ್ತಿದ್ದೇವೆ. ಪುಡಿ ರೌಡಿಗಳ ಕೃತ್ಯಗಳ ಸಂಬಂಧ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.
”ಅದರಲ್ಲಿ, ಕಳೆದ ನಾಲ್ಕು ದಿನಗಳ ಹಿಂದೆ ಸ್ಮಶಾನದಲ್ಲಿ ಪುಡಿ ರೌಡಿಗಳು ಅಟ್ಟಹಾಸ ತೋರುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಯುವಕನೋರ್ವನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದರ ಬೆನ್ನಲ್ಲೇ ನಮ್ಮ ತಂಡ ಪರಿಶೀಲನೆ ಮಾಡಿ, ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಹಲ್ಲೆಗೊಳಗಾದ ಯುವಕ ಟಿ.ನರಸಿಪುರದ ಯಶ್ವಂತ್ ಎಂದು ಪತ್ತೆ ಮಾಡಿ, ಆತನಿಂದ ದೂರು ಪಡೆದಿದ್ದೇವೆ. ರೌಡಿಗಳ ಪತ್ತೆಗೆ ತನಿಖಾ ತಂಡ ರಚಿಸಲಾಗಿತ್ತು” ಎಂದು ಮಾಹಿತಿ ನೀಡಿದರು.
”ತನಿಖೆ ವೇಳೆ, ಬಿ.ಹೊಸೂರು ಗ್ರಾಮದ ಬಳಿ ಆರೋಪಿತರು ಇರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆದಿದೆ. ಐವರು ಆರೋಪಿತರಿದ್ದು, ವಶಕ್ಕೆ ಪಡೆಯುವ ವೇಳೆ ಸುಭಾಷ್ ತಪ್ಪಿಸಿಕೊಂಡಿದ್ದ. ಪಿಎಸ್ಐ ಶೇಷಾದ್ರಿ ಅವರು ನೇತೃತ್ವದಲ್ಲಿ ಪತ್ತೆ ಕಾರ್ಯ ನಡೆಸಲಾಗಿದ್ದು, ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಪೊಲೀಸರು ಪಿಸ್ತೂಲ್ನಿಂದ ಕಾಲಿಗೆ ಶೂಟ್ ಮಾಡಿದ್ದಾರೆ. ಆರೋಪಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದರು.
Laxmi News 24×7