ಶಿವಮೊಗ್ಗ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ, ಬಂಗಾರ ದೋಚಿದ್ದ ಮೂವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
2020ರಲ್ಲಿ ಸಾಗರ ತಾಲೂಕು ಸಿರಿವಂತೆ ಗ್ರಾಮದ 44 ವರ್ಷದ ಮಹಿಳೆಯ ಕತ್ತು ಕೊಯ್ದ ದುಷ್ಕರ್ಮಿಗಳು, ಆಕೆಯ ಬಳಿ ಇದ್ದ ಚಿನ್ನಾಭರಣ ದೋಚಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಂದಿನ ಸಿಪಿಐ ಸುನೀಲ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಿದ್ದರು. ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಪ್ರಭಾವತಿ ಅವರು, ಸಾಗರ ನಗರದ ನಿವಾಸಿಗಳಾದ ಅರುಣ್ ಅಲಿಯಾಸ್ ಗೆಂಡೆ ಅರುಣ್(27), ಅಭಿಜಿತ್ (28) ಹಾಗೂ ಇರ್ಫಾನ್(20) ಎಂಬವರಿಗೆ ದಂಡಸಹಿತ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಅತ್ಯಾಚಾರ ಅಪರಾಧಿಗೆ ಶಿಕ್ಷೆ: 15 ವರ್ಷದ ಬಾಲಕಿಯ ಮೇಲೆ 19 ವರ್ಷದ ಯುವಕ ಅತ್ಯಾಚಾರ ನಡೆಸಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2.01 ಲಕ್ಷ ರೂ. ದಂಡ ವಿಧಿಸಿದೆ.
ಭದ್ರಾವತಿಯ ನ್ಯೂ-ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಸಿಪಿಐ ರಾಘವೇಂದ್ರ ಕಾಂಡಿಕೆ ಅವರು ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮೋಹನ್.ಜೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2.01 ಲಕ್ಷ ರೂ. ದಂಡ ವಿಧಿಸಿದ್ದಾರೆ.
ದಂಡ ಕಟ್ಟಲು ವಿಫಲವಾದರೆ 1 ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿಗೆ ದಂಡದ ಹಣದಲ್ಲಿ 2 ಲಕ್ಷ ರೂ. ಹಾಗೂ ಸರ್ಕಾರದಿಂದ 2 ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿದೆ. ಸರ್ಕಾರದ ಪರವಾಗಿ ಶ್ರೀಧರ್ ಹೆಚ್.ಆರ್ ವಾದ ಮಂಡಿಸಿದ್ದರು.
Laxmi News 24×7