ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ.
ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ಯೋಜನಾ ಇಲಾಖೆ ಜೊತೆ ಸಭೆ ನಡೆಸಲಾಗಿದ್ದು,ಅನುದಾನ ಬಿಡುಗಡೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.