ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಬೆಂಗಳೂರಿನಲ್ಲಿರುವ ರನ್ಯಾ ರಾವ್ರ ನಿವಾಸ, ಅವರ ವಿವಾಹ ಜರುಗಿದ ಹೋಟೆಲ್, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್ ಜೊತೆಗೆ ಸಂಪರ್ಕ ಹೊಂದಿರುವವರ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದರ ಭಾಗವಾಗಿ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಅತಿಥಿಗಳು, ಬಂದಿರುವ ದುಬಾರಿ ಉಡುಗೊರೆಗಳು ಕುರಿತು ತಿಳಿದುಕೊಳ್ಳಲು ವಿವಾಹದ ದೃಶ್ಯಾವಳಿಗಳು ಮತ್ತು ಅತಿಥಿಗಳ ಪಟ್ಟಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಹಾಗೂ ನಿಗದಿತ ಅವಧಿಯಲ್ಲಿ ಕೆಐಎಡಿಬಿಯಿಂದ ಅನುಮೋದನೆಯಾದ ಭೂ ವಿವರದ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಸಿಬಿಐ ಮೂಲಗಳಿಂದ ತಿಳಿದು ಬಂದಿದೆ.
ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ರನ್ಯಾ ರಾವ್ ಅವರನ್ನು ಮೀರಿ ವಿಸ್ತರಿಸಿದೆ ಎನ್ನಲಾಗಿದ್ದು, ಸಂಭಾವ್ಯ ಸಂಪರ್ಕಗಳ ಕುರಿತು ಸಿಬಿಐ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮತ್ತೊಂದೆಡೆ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ. ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ಐ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ರನ್ಯಾ ರಾವ್ಗೆ ಜಾಮೀನು ನೀಡದಂತೆ ಡಿಆರ್ಐ ತನಿಖಾಧಿಕಾರಿ ನಾಗೇಶ್ವರ ರಾವ್ ಆಕ್ಷೇಪಣೆ ಸಲ್ಲಿಸಿದ್ದಾರೆ.
Laxmi News 24×7