ಶಿವಮೊಗ್ಗ: 2021ರಲ್ಲಿ ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಅನಿಲ್ ಎಂಬಾತನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
2021ರ ಅಕ್ಟೋಬರ್ 14 ರಂದು ಬಾಪೂಜಿ ನಗರದ ಗಂಗಾಮತ ಎಂಬ ಹಾಸ್ಟೆಲ್ ಮುಂಭಾಗ ರಾತ್ರಿ ಸಂತೋಷ್ ಎಂಬಾತನ ಮೇಲೆ ಅನಿಲ್ ಹಾಗೂ ಆತನ ಸಹಚರರು ಸೇರಿ ದಾಳಿ ನಡೆಸಿದ್ದರು. ಬೈಕ್ನಲ್ಲಿ ಬರುತ್ತಿದ್ದ ಸಂತೋಷನನ್ನು ಅಡ್ಡಗಟ್ಟಿ ಮಚ್ಚಿನಿಂದ ತಲೆಗೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಕುರಿತು ಸಂತೋಷ್ ತಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಅಂದಿನ ಪಿ ಐ ಚಂದ್ರಶೇಖರ್ ಅವರು ಪ್ರಕರಣದ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು.ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯ, ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಆರೋಪಿ ಅನಿಲ್ ಕುಮಾರ್ (27)ಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಪರಿಹಾರದ ಮೊತ್ತದಲ್ಲಿ 25 ಸಾವಿರ ರೂ.ಗಳನ್ನು ಮೃತನ ತಂದೆಗೆ ನೀಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರಿ ವಕೀಲರಾದ ಸುರೇಶ್ ಕುಮಾರ್ ಅವರು ವಾದ ಮಂಡಿಸಿದ್ದಾರೆ.
Laxmi News 24×7