ಬೆಂಗಳೂರು : “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ, ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ.
ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಇಂದು ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿಮ್ಮೆಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ನೆಹರೂ ಅವರು ಒಂದು ಮಾತು ಹೇಳಿದ್ದಾರೆ. ಜನರನ್ನು ಜಾಗೃತರನ್ನಾಗಿ ಮಾಡಬೇಕಾದರೆ ಮಹಿಳೆಯರು ಜಾಗೃತರಾಗಿರಬೇಕು. ಆಕೆ ನಡೆದರೆ ಕುಟುಂಬ ನಡೆದಂತೆ, ಕುಟುಂಬ ನಡೆದರೆ ಗ್ರಾಮ ನಡೆದಂತೆ, ಸಮಾಜ ಹಾಗೂ ದೇಶ ನಡೆಯುತ್ತದೆ” ಎಂದು ಹೇಳಿದ್ದಾರೆ ಎಂದರು.ರಾಜ್ಯದಲ್ಲಿ 1.23 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪುತ್ತಿದೆ. 1.50 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆ ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೂ ಬಸ್ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೇವೆ.
ಇನ್ನು ಬಡವರಿಗೆ ನೀಡುವ ಮನೆ ಹಾಗೂ ನಿವೇಶನಗಳನ್ನು ಆ ಕುಟುಂಬದ ಮಹಿಳೆಯರ ಹೆಸರಿನಲ್ಲಿ ಮಾಡಬೇಕು ಎಂದು ಕಡ್ಡಾಯ ನಿಯಮ ಮಾಡಿದ್ದೇವೆ. ನನ್ನ ಕ್ಷೇತ್ರದಲ್ಲಿ ಆಶ್ರಯ 7 ಸಾವಿರ ನಿವೇಶನ ನೀಡಿದ್ದೆ. ಎಲ್ಲವನ್ನು ಮಹಿಳೆಯರ ಹೆಸರಿಗೆ ನಿವೇಶನ ಹಂಚಿದೆ. ಅದಾದ ನಂತರದ ಚುನಾವಣೆಯಲ್ಲಿ ಜನ ನನ್ನನ್ನು 30 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದರು ಎಂದು ತಿಳಿಸಿದರು.
“18 ಕ್ಷೇತ್ರಗಳ ಉಪಚುನಾವಣೆಯಲ್ಲಿ 15 ರಲ್ಲಿ ಸೋತು ಪಕ್ಷ ಕಷ್ಟದ ಪರಿಸ್ಥಿತಿಯಲ್ಲಿತ್ತು. ಮಾರ್ಚ್ 11ರಂದು ನಾನು ಅಧ್ಯಕ್ಷನಾಗಿ ನೇಮಕಗೊಂಡು 5 ವರ್ಷವಾಗಿವೆ. ನಾನು ಇಲ್ಲಿ ಅಧಿಕಾರ ಸ್ವೀಕರಿಸಿದ ದಿನ ‘ನನಗೆ ಭವಿಷ್ಯ ಕಾಣಬೇಕಾದರೆ ಮಹಿಳೆ ಹಾಗೂ ಯುವಕರಿಂದ ಮಾತ್ರ ಸಾಧ್ಯ’ ಎಂದು ಹೇಳಿದ್ದೆ. ಅದರಂತೆ ನಾವು ಚುನಾವಣೆಯ ಪ್ರಣಾಳಿಕೆ ಮಾಡುವಾಗ ಯುವಕರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಿದೆವು” ಎಂದು ಹೇಳಿದರು.
“ನಮ್ಮ ಈ ಯೋಜನೆಗಳು ಜಾರಿ ಸಾಧ್ಯವೇ? ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಹಾಗೂ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಮಂತ್ರಿಯಾದಿಯಾಗಿ ಬಿಜೆಪಿ ನಾಯಕರು ಟೀಕೆ ಮಾಡಿದರು. ಆದರೆ, ಈಗ ನಮ್ಮ ಮಾದರಿ ಅನುಸರಿಸಿ ಬಿಜೆಪಿ ರಾಜ್ಯಗಳು ಗ್ಯಾರಂಟಿ ಯೋಜನೆ ನೀಡುತ್ತಿವೆ. ನಾವು ಕಾರ್ಯಕರ್ತರಿಗಾಗಿ ಗ್ಯಾರಂಟಿ ಸಮಿತಿ ರಚಿಸಿದ್ದೇವೆ. ಇದರ ವಿರುದ್ಧ ಅಧಿವೇಶನದಲ್ಲಿ ವಿರೋಧ ಪಕ್ಷದವರು ನಮ್ಮ ಮೇಲೆ ವಾಗ್ದಾಳಿಗೆ ಮುಂದಾಗಿದ್ದಾರೆ. ಶಾಸಕರ ಹಕ್ಕು ಕಸಿಯುತ್ತಿದ್ದೀರಿ” ಎಂದು ತಿಳಿಸಿದರು.