ಬೆಳಗಾವಿ : ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಮೂಲಕ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಒಡಕು ಮೂಡಿಸುವ ದುಸ್ಸಾಹಸ ಮತ್ತು ಷಡ್ಯಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ಮುಸ್ಲಿಂರ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಎಚ್ಚರಿಸಿದರು.
ಇಂದು ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಅಲ್ಪಸಂಖ್ಯಾತರಿಗೆ ಮೀಸಲಿಡುವುದಾಗಿ ಘೋಷಿಸಿದ್ದರು. ಅದೇ ರೀತಿ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡುವ ಬಗ್ಗೆ ಉಲ್ಲೇಖವಾಗಿಲ್ಲ. ಹಾಗಾಗಿ, ಈ ಅಸಂವಿಧಾನಾತ್ಮಕ ತೀರ್ಮಾನವನ್ನು ನಾವು ಖಂಡಿಸುತ್ತೇವೆ, ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ವಿರೋಧಿಸುತ್ತೇವೆ ಎಂದರು.ಸದನದೊಳಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿದ್ದೇವೆ. ಹಣಕಾಸಿನ ಮುಗ್ಗಟ್ಟಿದೆ ಅಂತಾ ಬಿಜೆಪಿ ಘೋಷಿಸಿದ್ದ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಈ ಸರ್ಕಾರ ಬಂದಿತ್ತು. ಯಾವಾಗ ಸದನದಲ್ಲಿ ಈ ವಿಷಯ ನಾವು ಚರ್ಚಿಸಿದೆವೋ, ಮುಂದೆ ನಾವು ಹೋರಾಟಕ್ಕೆ ಇಳಿಯುತ್ತೇವೆ ಎಂಬುದನ್ನು ಮನಗಂಡು ಸಿಎಂ ಸಿದ್ದರಾಮಯ್ಯ ಅವರು ವಿವಿಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿಲ್ಲ ಎಂದು ಮೊನ್ನೆ ಸದನದಲ್ಲಿ ಹೇಳಿಕೆ ನೀಡಿದ್ದಾರೆ. ಆ ನಿರ್ಧಾರದಿಂದ ಒಂದು ಹೆಜ್ಜೆ ಹಿಂದೆ ಸರಿದಿದ್ದಾರೆ. ಇದು ನಮ್ಮ ಹೋರಾಟದ ಪರಿಣಾಮ ಎಂದು ಸಮರ್ಥಿಸಿಕೊಂಡರು.
Laxmi News 24×7