ಬೆಂಗಳೂರು : ಮಾರಕಾಸ್ತ್ರ ಝಳಪಿಸುತ್ತಾ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳು.
ಮಾರ್ಚ್ 15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಗೆ ಉಜ್ಜುತ್ತಾ, ಸ್ಕೂಟರ್ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಂಚಾರ ಠಾಣೆ ಪೊಲೀಸರು, ಇಬ್ಬರೂ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಸಹಚರರೊಂದಿಗೆ ಸೇರಿ ಏರಿಯಾದಲ್ಲಿ ಭಯ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಹೀಗಾಗಿ, ನಂದಿನಿ ಲೇಔಟ್ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಭಾರತೀಯ ನ್ಯಾಯಸಂಹಿತೆ ಹಾಗೂ ಶಸ್ತ್ರಾಸ್ತ್ರಕಾಯ್ದೆಗಳಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿದ ಪೊಲೀಸರು
Laxmi News 24×7