ಮೈಸೂರು : ರಾಜ್ಯಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷಗಳು ಹಿತವಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹರಿಹಾಯ್ದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮೂರೂ ಪಕ್ಷಗಳು ಲದ್ದಿ ಇದ್ದ ಹಾಗೆ, ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. ಅಧಿವೇಶನದಲ್ಲಿ ಯಾರಿಗೋಸ್ಕರ ಹೊಡೆದಾಟ ಮಾಡಿದರು ಎಂದು ಪ್ರಶ್ನಿಸಿದರು.
ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಹೂಡಲು ಚಿಂತನೆ ನಡೆಸಲಾಗುವುದು. ಬೃಹತ್ ಮೈಸೂರು ಮಹಾ ನಗರಪಾಲಿಕೆ ರಚನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಪಾಲಿಕೆ ಚುನಾವಣೆಯನ್ನು ಮುಂದೂಡುತ್ತಲೇ ಇದೆ. ಇದರಿಂದ ಪಾಲಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಆರೋಪಿಸಿದರು.
ಸ್ಥಳೀಯ ಚುನಾವಣೆ ನಡೆಸಲು ಆದ್ಯತೆ ಕೊಡಬೇಕು: ಸಾಮಾಜಿಕ ನ್ಯಾಯದ ಪರ ಎಂದು ಮಾತನಾಡುತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ಥಳೀಯ ಚುನಾವಣೆಯ ಬಗ್ಗೆ ಯಾಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ? ಎಂಎಲ್ಎ, ಎಂಎಲ್ಸಿಗಳ ಸಂಬಳ ಹೆಚ್ಚಳಕ್ಕೆ ಆದ್ಯತೆ ಕೊಡುವ ನೀವು, ಸ್ಥಳೀಯ ಚುನಾವಣೆ ನಡೆಸಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಮೂರು ಪಕ್ಷಗಳ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಬೃಹತ್ ಮಹಾನಗರಪಾಲಿಕೆ ರಚನೆ ಬದಲಿಗೆ ಶೀಘ್ರ ಚುನಾವಣೆ ನಡೆಯುವುದು ಬೇಕಿದೆ. ಆದರೆ, ಪಕ್ಷದ ನಾಯಕತ್ವದ ವಿರುದ್ಧ ಧ್ವನಿ ಎತ್ತಲಾಗದೆ ಪರಿತಪಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಥಳೀಯ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಹೇಳಬೇಕು ಎಂದು ಹೇಳಿದರು.
Laxmi News 24×7