ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹೆಸರಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಗುಂಡುಮಿ (41), ಮೋನೀಷ್ ಕೆ.ಜೆ (36) ಹಾಗೂ ರಾಜಶೇಖರ (41) ಬಂಧಿತ ಆರೋಪಿಗಳು. ಕತ್ರಿಗುಪ್ಪೆಯ ರಾಮ್ ರಾವ್ ಲೇಔಟ್ನಲ್ಲಿರುವ ಅಕಾಡೆಮಿಯೊಂದರಲ್ಲಿ ಪಿಯುಸಿಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಯಾವುದೇ ಪರೀಕ್ಷೆ ಬರೆಯದೆಯೇ ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಹೆಸರಿನಲ್ಲಿ ಅಂಕಪಟ್ಟಿ ನೀಡಿದ್ದರು. ವಿದ್ಯಾರ್ಥಿಯ ಕಡೆಯವರು ಅಂಕಪಟ್ಟಿ ಪರಿಶೀಲಿಸಿ ಅನುಮಾನಗೊಂಡು ಪೊಲೀಸ್ ಆಯುಕ್ತರ ಕಚೇರಿಗೆ ದೂರು ನೀಡಿದ್ದರು.
ಆರೋಪಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧ್ಯಯನ ಕೇಂದ್ರಗಳನ್ನು ತೆರೆದು, ಅಲ್ಲಿ ವಿದ್ಯಾರ್ಥಿಗಳನ್ನ ದಾಖಲಿಸಿಕೊಳ್ಳುತ್ತಿದ್ದರು. ಬಳಿಕ ಕಲವೇ ದಿನಗಳದಲ್ಲಿ ಅವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತ್ತಿದ್ದರು.
ಆರೋಪಿಗಳು 5 ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಆರೋಪಿಗಳಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧೆಡೆ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ಕೆಲಸ ನೀಡುವ ಮೊದಲು ಪರಿಶೀಲನೆ ಮಾಡಿದಾಗಲೂ ಸಹ ಅಸಲಿ ಅಂಕಪಟ್ಟಿ ಎಂದೇ ಆರೋಪಿಗಳು ಮಾಹಿತಿ ನೀಡಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿರುವ ಸಿಸಿಬಿ ಪೊಲೀಸರು ಈ ಮಾದರಿಯ ಅಂಕಪಟ್ಟಿ ಎಲ್ಲಿಯಾದರೂ ಸಲ್ಲಿಕೆಯಾಗಿದ್ದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
Laxmi News 24×7