ಶಿವಮೊಗ್ಗ: ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
ಮಂಗಳವಾರ ಶಿವಮೊಗ್ಗದ ರೌಡಿಶೀಟರ್ ಕಡೆಕಲ್ ಹಬೀದ್ ಹಾಗೂ ಆತನ ಸಹಚರರು ಓರ್ವ ವ್ಯಕ್ತಿಯ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕಿದ್ದರು. ಈ ಕುರಿತು ಮಾಹಿತಿ ಪಡೆದ ಭದ್ರಾವತಿ ಪೇಪರ್ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗಮ್ಮ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ಆರೋಪಿಗಳು ಮಾರಕಾಸ್ತ್ರ ಬೀಸಿ ಗಾಯಗೊಳಿಸಿದ್ದಾರೆ. ಇನ್ಸ್ಪೆಕ್ಟರ್ ನಾಗಮ್ಮನವರ ಮೇಲೂ ದಾಳಿಗೆ ಮುಂದಾದಾಗ ಅವರು ಹಬೀದ್ನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಗೊಂಡಿರುವ ಅರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಆರೋಪಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.ಹಬೀದ್ ಮೇಲೆ ಒಟ್ಟು 20 ಪ್ರಕರಣಗಳಿವೆ ಎಂದು ಎಸ್ಪಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.