ಬೆಂಗಳೂರು: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಮೊದಲಿಗರು. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ ಎಂದು ವಿವರಿಸಿದ್ದಾರೆ.
ಸಮಾಧಿ ತಾಣ ಧೈರ್ಯ ಮತ್ತು ತ್ಯಾಗದ ಸಂಕೇತ: ಈ ಅಪ್ರತಿಮ ನಾಯಕಿಯ ಸಮಾಧಿಯು ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರತಿನಿಧಿಸುವ ಮಹಾನ್ ಶಕ್ತಿ ಸ್ಥಳವಾಗಿದೆ. 1824ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ರಾಣಿ ಚೆನ್ನಮ್ಮ ಕೆಚ್ಚೆದೆಯಿಂದ ಹೋರಾಡಿದ ಕಾರಣ ಇಂದಿಗೂ ಈ ಸಮಾಧಿ ತಾಣ ಧೈರ್ಯ ಮತ್ತು ತ್ಯಾಗದ ಸಂಕೇತವಾಗಿ ನಿಂತಿದೆ ಎಂದಿದ್ದಾರೆ.
ಹೀಗಾಗಿ, ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ ಮಾಡುತ್ತೇನೆ. ಈ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿನ ಅವರ ಹೋರಾಟವನ್ನು ಸ್ಮರಿಸಿ, ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
Laxmi News 24×7