ಬೆಂಗಳೂರು,ಡಿ.12-ಸಾರಿಗೆ ನೌಕರರು ತಮ್ಮ ಪ್ರತಿಭಟನೆಯನ್ನು ನಾಳೆ ಸಂಜೆಯೊಳಗೆ ಹಿಂಪಡೆಯದಿದ್ದರೆ ಅಗತ್ಯ ಸೇವಾ ನಿರ್ವಹಣಾ ಕಾಯೆ (ಎಸ್ಮಾ) ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಭಟನೆಯನ್ನು ಕೈಬಿಟ್ಟು ಎಲ್ಲಾ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. ಮಾತುಕತೆಗೆ ಬಂದು ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಮುಂದಾಗದಿದ್ದರೆ ಎಸ್ಮಾ ಜಾರಿಯಾಗುವುದು ಖಚಿತ.
ನಾಳೆ ಸಂಜೆಯವರೆಗೂ ಕಾದು ನೋಡಿ. ನೌಕರ ಸಂಘಟನೆಯ ಮುಖಂಡರು ಮಾತುಕತೆಗೆ ಬಾರದೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರೆ ಅವರ ವಿರುದ್ಧ ಎಸ್ಮಾ ಜಾರಿ ಮಾಡಲು ಹಿಂದೆಮುಂದೆ ನೋಡಬಾರದೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಕೊಟ್ಟಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟೇ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುತ್ತೇವೆ ಎಂದು ಹೊರಟರೆ ನೌಕರರಿಗೆ ಕಾನೂನು ಕ್ರಮ ಜರುಗಿಸಲು ಮೀನಾಮೇಷ ಬೇಡ ಎಂದು ಸಿಎಂ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಈ ಸಂದರ್ಭದಲ್ಲಿ ಪರಿಗಣಿಸಲು ಸಾಧ್ಯವೇ ಇಲ್ಲ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದರೂ ಸರ್ಕಾರದ ಪರಿಸ್ಥಿತಿಯನ್ನು ಏಕೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿವೆ. ನೌಕರರಿಗೆ ಇಲಾಖೆ ವೇತನ ನೀಡಬೇಕಿತ್ತು. ಬಾಕಿ ಇದ್ದ 300 ಕೋಟಿಗೂ ಅಧಿಕ ಹಣವನ್ನು ಮಾನವೀಯತೆ ದೃಷ್ಟಿಯಿಂದ ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿದ್ದೇವೆ.
ಬಿಎಂಟಿಸಿ, ಈಶಾನ್ಯ, ವಾಯುವ್ಯ ಹಾಗೂ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳ ಎಲ್ಲಾ ನೌಕರರ ವೇತನವನ್ನು ನವೆಂಬರ್ ತಿಂಗಳ ಅಂತ್ಯಕ್ಕೆ ಒಂದೇ ಒಂದೂ ರೂಪಾಯಿ ಬಾಕಿ ಇಲ್ಲದಂತೆ ನೀಡಲಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗಲೂ ಸಾರಿಗೆ ನೌಕರರ ಶೇ.30ರಿಂದ 40ರಷ್ಟು ವೇತನ ನೀಡಿಲ್ಲ. ನಮ್ಮಲ್ಲಿ ಎಲ್ಲ ಸವಲತ್ತುಗಳನ್ನು ಕೊಟ್ಟರೂ ನೌಕರರು ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸುವುದು ಸೂಕ್ತವೇ ಎಂದು ಪ್ರಶ್ನೆ ಮಾಡಿದ್ದಾರೆ.