ಬೆಂಗಳೂರು: ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್, ಏಪ್ರಿಲ್ 15ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ವಕೀಲರ ವಾದ: ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ”ಆರೋಪಿತ ಘಟನೆ ನಡೆದ ನಾಲ್ಕೂವರೆ ವರ್ಷಗಳ ಬಳಿಕ ದೂರು ದಾಖಲಾಗಿದೆ. ಇಷ್ಟು ವಿಳಂಬವಾಗಿ ಏಕೆ ಎಂಬುದಕ್ಕೆ ಸಂಬಂಧಿಸಿದಂತೆ ಸೂಕ್ತ ವಿವರಣೆ ನೀಡಿಲ್ಲ. ಇದು ಪ್ರಮುಖವಾದ ಅಂಶವಾಗಿದ್ದು, ಈ ರೀತಿಯ ಪ್ರಕರಣಗಳಲ್ಲಿ ನಮ್ಮ ಕಕ್ಷಿದಾರರನ್ನು ನ್ಯಾಯಾಂಗ ಬಂಧನದಲ್ಲಿರಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೆ, ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಇನ್ನೊಂದು ಪೀಠ ವಿಚಾರಣೆಗೆ ತಡೆ ನೀಡಿದೆ. ಹೀಗಾಗಿ, ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು” ಎಂದು ಕೋರಿದರು.
ಅರ್ಜಿದಾರರೇ ಪ್ರಮುಖ ಆರೋಪಿ: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ”ಅರ್ಜಿದಾರರ ವಿರುದ್ಧದ ಆರೋಪಗಳನ್ನು ಪರಿಗಣಿಸಿ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಹೊಸದಾಗಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪುರಸ್ಕರಿಸುವುದಕ್ಕೆ ಯಾವುದೇ ಸೂಕ್ತ ಕಾರಣಗಳನ್ನು ವಿವರಿಸಲಾಗಿಲ್ಲ. ಜೊತೆಗೆ, ಪ್ರಕರಣದಲ್ಲಿ ಅರ್ಜಿದಾರರೇ ಪ್ರಮುಖ ಆರೋಪಿಯಾಗಿದ್ದಾರೆ. ಇತರೆ ಆರೋಪಗಳ ವಿರುದ್ಧವೂ ತನಿಖೆ ನಡೆಸಲಾಗಿದೆ. ಹೀಗಾಗಿ, ಜಾಮೀನು ಅರ್ಜಿ ವಜಾಗೊಳಿಸಬೇಕು” ಎಂದು ಪೀಠಕ್ಕೆ ವಿವರಿಸಿದರು.ವಾದ ಆಲಿಸಿದ ಪೀಠ, ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ವಿರುದ್ಧ ವಿಚಾರಣೆಗೆ ತಡೆ ನೀಡಿದೆ. ಆದರೆ, ಈ ಅರ್ಜಿದಾರರ ವಿರುದ್ಧ ಬಲವಾದ ಆರೋಪಗಳಿವೆ. ಹೀಗಾಗಿ, ಮತ್ತೊಂದ ಪೀಠ ಜಾಮೀನು ನಿರಾಕರಿಸಿದ್ದು, ಇದೀಗ ಜಾಮೀನು ನೀಡಬೇಕೇ ಎಂಬುದಕ್ಕೆ ಸಂಬಂಧಿಸಿದಂತೆ ಸೂಕ್ತ ಕಾರಣಗಳನ್ನು ನೀಡಬೇಕಾಗುತ್ತದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು
Laxmi News 24×7