ಹುಬ್ಬಳ್ಳಿ: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣ (ನಗರ ಪ್ರಾದೇಶಿಕ ಬಸ್ ನಿಲ್ದಾಣ) ವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.
ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 ಮೀಟರ್ ಕಾಮಗಾರಿ ನಡೆಯಲಿದೆ. 80 ಗರ್ಡರ್ ಹಾಗೂ 16 ಸ್ಲಾಬ್ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಹೀಗಾಗಿ ಹಳೇ ಬಸ್ ನಿಲ್ದಾಣ ತಾತ್ಕಾಲಿಕವಾಗಿ ಸ್ಥಳ ಬದಲಾವಣೆ ಮಾಡಿ ಐಟಿ ಪಾರ್ಕ್ ಹತ್ತಿರ ತಾತ್ಕಾಲಿಕ ಬಸ್ ನಿಲ್ದಾಣ ಸ್ಥಾಪಿಸಲಾಗುತ್ತಿದೆ.
ಉಪ ನಗರ ಬಸ್ ನಿಲ್ದಾಣವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ನಿರ್ವಹಣೆ ಹಾಗೂ ರಕ್ಷಣೆ ಮಾಡಬೇಕಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್ ಪ್ರಾದೇಶಿಕ ನಗರ ಸಾರಿಗೆ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲಾಗಿತ್ತು. ಜ.12 ರಂದು ಉದ್ಘಾಟನೆಯಾದ ಬಸ್ ನಿಲ್ದಾಣ ಈಗ ಸಂಪೂರ್ಣವಾಗಿ ಬಂದ್ ಆಗಲಿದೆ.
ವಿಜಯಪುರ, ಗದಗ ಹಾಗೂ ಉಳಿದ ಪ್ರದೇಶದಿಂದ ಬರುವ ಬಸ್ಸುಗಳಿಗೆ ಕಾರವಾರ ರಸ್ತೆ, ಸಿಬಿಟಿ ಹಾಗೂ ಹೊಸೂರ ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಸಂಚಾರಕ್ಕೆ ಸಮಸ್ಯೆಯಾಗದಂತೆ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. 3.10 ಕಿ.ಮೀ. ವ್ಯಾಪ್ತಿಯಲ್ಲಿ ಮೇಲ್ಸೆತುವೆ ಕಾಮಗಾರಿ ನಡೆಯಲಿದ್ದು, ಕೆಲವೆಡೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಈ ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
Laxmi News 24×7