Breaking News

ಕರ್ನಾಟಕದ ಮರಾಠಿ ವಿದ್ಯಾರ್ಥಿಗಳಿಗೆ ಕೊಲ್ಹಾಪುರದಲ್ಲಿರುವ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಶುಲ್ಕ ವಿನಾಯಿತಿ ಆಫರ್ ನೀಡಿದ್ದಕ್ಕೆ ಕನ್ನಡ ಸಂಘಟನೆಗಳು ಆಕ್ರೋಶ

Spread the love

ಬೆಳಗಾವಿ: ಸ್ಮೃತಿ ಭವನಕ್ಕೆ ಬೆಳಗಾವಿ ಜಿಲ್ಲಾಡಳಿತ ಕಡಿವಾಣ ಹಾಕುತ್ತಿದ್ದಂತೆ ಮಹಾರಾಷ್ಟ್ರ ಮತ್ತೊಂದು ಕ್ಯಾತೆ ಶುರು ಮಾಡಿದೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ರಾಜ್ಯದಲ್ಲಿರುವ ಸುಮಾರು 865ಕ್ಕೂ ಹೆಚ್ಚು ಗ್ರಾಮಗಳ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಶುಲ್ಕ ವಿನಾಯಿತಿ, ಉಚಿತ ಹಾಸ್ಟೆಲ್ ಸೌಲಭ್ಯದ ಆಫರ್ ನೀಡಿದೆ. ಈ ವಿಚಾರವಾಗಿ ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986ರಲ್ಲಿ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ನಡೆದ ಗೋಲಿಬಾರ್​ನಲ್ಲಿ ಮೃತಪಟ್ಟ ಮರಾಠಿ ಭಾಷಿಕರ ಸ್ಮರಣೆಗಾಗಿ ಎಂಇಎಸ್ ಮುಖಂಡರು ಮಹಾರಾಷ್ಟ್ರ ಸರ್ಕಾರದ ನೆರವಿನಿಂದ ಬೆಳಗಾವಿಯ ಹಿಂಡಲಗಾದಲ್ಲಿ ಸ್ಮೃತಿ ಭವನ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೇ, ಭೂಮಿಪೂಜೆಯನ್ನೂ ನೆರವೇರಿಸಿದ್ದರು.

ಈ ಸಂಗತಿ ತಿಳಿಯುತ್ತಿದ್ದಂತೆಯೇ ಕನ್ನಡಪರ ಹೋರಾಟಗಾರರು, ಕನ್ನಡ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಸ್ಮೃತಿ ಭವನಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಒತ್ತಾಯಿಸಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಬೆಳಗಾವಿ ಜಿಲ್ಲಾಡಳಿತ ಸ್ಮೃತಿ ಭವನ ನಿರ್ಮಾಣಕ್ಕೆ ಕಡಿವಾಣ ಹಾಕಿದೆ.

ಆದರೆ, ಈ ವಿಚಾರ ತಣ್ಣಗಾಯಿತು ಎನ್ನುವಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಹಾಪುರದಲ್ಲಿರುವ ಶಿವಾಜಿ ವಿಶ್ವವಿದ್ಯಾಲಯದ ಮೂಲಕ ಗಡಿ ಭಾಗದ ಮರಾಠಿ ಭಾಷಿಕ ವಿದ್ಯಾರ್ಥಿಗಳನ್ನು ಸೆಳೆಯಲು ತಂತ್ರ ರೂಪಿಸಿದೆ. ಜೊತೆಗೆ, ಈ ಭಾಗದ ಮರಾಠಿ ಭಾಷಿಕ ವಿದ್ಯಾರ್ಥಿಗಳಿಗಾಗಿಯೇ ಬೆಳಗಾವಿಯ ಮೂರು ಕಡೆಗಳಲ್ಲಿ ಕಾರ್ಯಾಗಾರಗಳನ್ನು ಏರ್ಪಡಿಸಲಾಗಿದೆ. ಏ.22ರಂದು ಏಕಕಾಲದಲ್ಲಿ ಈ ಕಾರ್ಯಾಗಾರಗಳು ನಡೆಯಲಿವೆ. ಈ ಬಗ್ಗೆ ಕೆಲ ಮರಾಠಿ ಪತ್ರಿಕೆಗಳಲ್ಲಿ‌ ಜಾಹೀರಾತನ್ನು ಪ್ರಕಟಿಸಲಾಗಿದೆ. ಶಿವಾಜಿ ವಿಶ್ವವಿದ್ಯಾಲಯದ ಈ ನಡೆಯಿಂದಾಗಿ ಕನ್ನಡ ಪರ ಸಂಘಟನೆಗಳು ಅಸಮಾಧಾನಗೊಂಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ