ಮಂಡ್ಯ, ಏಪ್ರಿಲ್ 13: ಕ್ರಿಶ್ಚಿಯನ್ (Christian) ಧರ್ಮಕ್ಕೆ ಮತಾಂತರವಾಗಲು (Conversion) ಒಪ್ಪದ ಪತ್ನಿ ಮತ್ತು ಅತ್ತೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ (Srirangapatna) ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್ ಎಂಬುವರು ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. 15 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದ ಲಕ್ಷ್ಮೀ ಜೊತೆ ಶ್ರೀಕಾಂತ್ ವಿವಾಹವಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಶ್ರೀಕಾಂತ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದಾರೆ. ಬಳಿಕ, ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಅವರಿಗೂ ಕೂಡ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು.
ಪತಿಯ ಕಿರುಕುಳ ತಾಳಲಾರದೆ ಲಕ್ಷ್ಮೀ ಕಳೆದ ಮೂರು ದಿನಗಳ ಹಿಂದೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ (ಏ.12) ರಂದು ರಾಜಿಗೆಂದು ಕರೆದು ಲಕ್ಷ್ಮೀ ಮತ್ತು ಶೃತಿಯವರ ತಲೆ ಭಾಗಕ್ಕೆ ಶ್ರೀಕಾಂತ್ ಹಾಗೂ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಲಕ್ಷ್ಮೀ ಸಹೋದರ ರವಿಕಿರಣ್ ದೂರು ಆಧರಿಸಿ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಸೇರಿದಂತೆ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚರ್ಚ್ ನಿರ್ಮಿಸಿ, ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಹಲವರನ್ನು ಮತಾಂತರ ಮಾಡಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ತವರು ಮನೆಯಿಂದ ಹಣ ತರುವಂತೆ ಲಕ್ಷ್ಮೀ ಅವರಿಗೆ ನಿತ್ಯ ಕಿರುಕುಳ ನೀಡಿದ್ದಾರೆ. ಈಗಾಗಲೇ 25 ಲಕ್ಷ ಹಣ ನೀಡಲಾಗಿದೆ. ಇದೇ ಹಣದಲ್ಲಿ ಚರ್ಚ್ ಕಟ್ಟಿಸಿಕೊಂಡು ಮತಾಂತರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
Laxmi News 24×7