ರಾಯಚೂರು: “ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ” ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕಲಬುರಗಿ ವಿಭಾಗ ಮಟ್ಟದ ಪ್ರತಿಭಟನಾ ಸಮಾವೇಶವನ್ನು ಕಾಂಗ್ರೆಸ್ ಆಯೋಜಿಸಿತ್ತು. ಆದರೆ ಪಹಲ್ಗಾಮ್ನಲ್ಲಿ ದಾಳಿಗೆ ಪ್ರತ್ಯುತ್ತರವಾಗಿ ನಮ್ಮ ಸೈನಿಕರು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಹೀಗಾಗಿ ಇಂದು ಆಯೋಜಿಸಿದ ಕಾರ್ಯಕ್ರಮವನ್ನು ರದ್ದುಗೊಳಿಸಿ, ಮುಂದಿನ ದಿನಗಳಲ್ಲಿ ದಿನಾಂಕ ಪ್ರಕಟಿಸಿ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ, ಅನೇಕ ಸಚಿವರು, ಹಾಲಿ ಹಾಗೂ ಮಾಜಿ ಸಂಸದರು, ಶಾಸಕರು, ಮುಖಂಡರು ಸೇರಿದಂತೆ ಹಲವು ಮುಖಂಡರು ಭಾಗವಹಿಸುವವರಿದ್ದರು. ಅಲ್ಲದೇ ವಿವಿಧ ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದರು. ಇದೀಗ ಸಮಾವೇಶ ರದ್ದುಗೊಳಿಸಿದ ಪರಿಣಾಮ ಎಲ್ಲರೂ ಹಿಂದಿರುಗುತ್ತಿದ್ದಾರೆ. ಅಲ್ಲದೆ ನಗರದ ವಿವಿಧ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ದೇಶದ ಸೈನಿಕರು ಅಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕ್ಗೆ ತಕ್ಕ ಉತ್ತರ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಬಸವನಗೌಡ ದದ್ದಲ್, ಎ.ವಸಂತಕುಮಾರ್, “ಉಗ್ರರನ್ನು ಮಟ್ಟ ಹಾಕುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದರು.
Laxmi News 24×7