ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು.
ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು.
ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಾಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆ ನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯ ಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರನ್ನು ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ ಎಂದು ಡಿ ಕೆ ಶಿವಕುಮಾರ್ ಭರವಸೆ ನೀಡಿದರು.
Laxmi News 24×7