ಬೆಂಗಳೂರು, (ಮೇ 28): ಪಂಚ ಗ್ಯಾರಂಟಿಗಳನ್ನ (guarantee scheme) ಐದು ವರ್ಷವೂ ನೀಡುತ್ತೇವೆ ಎನ್ನುವ ವಾಗ್ದಾನದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದೀಗ ಅದೇ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರ ಸಚಿವರು, ಶಾಸಕರ ನೀಡುತ್ತಿರುವ ಹೇಳಿಕೆಗಳು ಗೊಂದಲವನ್ನ ಸೃಷ್ಟಿಸುತ್ತಿವೆ.
ಫಲಾನುಭವಿಗಳಿಗೂ ಈ ರೀತಿಯ ಹೇಳಿಕೆಯಿಂದ ಆತಂಕ ಹೆಚ್ಚಾಗಿದೆ. ಅನರ್ಹರಿಗೆ ಕಡಿವಾಣ ಹಾಕಿ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ ಎಂಬ ಶಾಸಕರು, ಸಚಿವರ ಗೊಂದಲದ ಹೇಳಿಕೆಗಳು ಇದೇ ಹೊಸದೇನಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basvaraj Rayareddi) ಅವರೇ ಈ ರೀತಿಯ ಸ್ಪೋಟಕ ಹೇಳಿಕೆಯನ್ನ ನೀಡಿದ್ದಾರೆ.ಮಂಗಳವಾರ ಯಲಬುರ್ಗಾ ತಾಲೂಕಿನ ಕುಕನೂರು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಗ್ಯಾರಂಟಿಗಳಲ್ಲಿ ಅನರ್ಹ ಫಲಾನುಭವಿಗಳಿಗೂ ಯೋಜನೆಯ ಲಾಭ ಹೋಗುತ್ತಿದೆ.
ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದಿದ್ದಾರೆ. ಇದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷಗಳಿಗೆ ಅಸ್ತ್ರವಾಗಿದೆ.ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಡಿ ಅಂದಾಜು 250 ಕೋಟಿ ಹಣ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ ಅನರ್ಹ ಫಲಾನುಭವಿಗಳಿಗೆ ಕಡಿವಾಣ ಹಾಕಬೇಕು ಎನ್ನುವ ವಿಚಾರ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ