ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಹೀಗಾಗಿ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮೂರು ರ್ಯಾಪಿಡ್ ಟೀಮ್ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ. 0-1 ಕಿ.ಮೀ ವರೆಗೆ ರೋಗ ಪೀಡಿತ ವಲಯ ಹಾಗೂ 1-10 ಕಿ.ಮೀ ವರೆಗೆ ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗ ಹರಡಿರುವ ಹಂದಿಗಳನ್ನು ಜೀವಂತ ಸಮಾಧಿ ಮಾಡಲಾಗುತ್ತಿದೆ.
ಇಳಕಲ್ ತಾಲೂಕಿನಲ್ಲಿ ಹಂದಿ ಸಾಗಾಣಿಕೆ ಮಾಡಿ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಗೆ ಈ ರೋಗ ಸೀಮಿತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ಜ್ವರ ಹರಡಿರುವ ಬಗ್ಗೆ ಮಾಹಿತಿ ನೀಡಿದೆ. ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕರಡಿಗುಡ್ಡ ತಿಳಿಸಿದ್ದಾರೆ.
Laxmi News 24×7