ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಆಡಳಿತ ಸಮಿತಿ, ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದೆ.
ಸಮಿತಿಯ ಅಧ್ಯಕ್ಷರಾದ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜಯರಾಮ್ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠದ ಮುಂದೆ ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ನಿಗದಿಯಾಗಿದೆ.
ಅರ್ಜಿಯಲ್ಲಿ ಏನಿದೆ?: ಪ್ರಕರಣ ಸಂಬಂಧ ಈಗಾಗಲೇ ಯುಡಿಆರ್ ದಾಖಲಿಸಿಕೊಳ್ಳಲಾಗಿದ್ದು, ಇದೀಗ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಇದು ಒಂದೇ ಪ್ರಕರಣ ಸಂಬಂಧ ಎರಡು ರೀತಿಯಲ್ಲಿ ತನಿಖೆ ನಡೆಸಬೇಕಾಗುತ್ತಿದ್ದು, ಕಾನೂನುಬಾಹಿರವಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಪ್ರಕರಣ ಸಂಬಂಧ ಹೈಕೋರ್ಟ್ ಈಗಾಗಲೇ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ ನಡುವೆ ಮತ್ತೊಂದು ಎಫ್ಐಆರ್ ದಾಖಲಿಸಿ ವಿಚಾರಣೆಗೊಳಪಡಿಸುವುದಕ್ಕೆ ಅವಕಾಶವಿಲ್ಲ. ಜೊತೆಗೆ, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವು, ಅಧಿಕಾರಿಗಳ ವೈಫಲ್ಯವನ್ನು ತೋರಿಸುತ್ತದೆ. ಘಟನೆಯು ಆಕಸ್ಮಿಕ ಮತ್ತು ಉದ್ದೇಶಪೂರ್ವಕವಲ್ಲದ ಕೃತ್ಯವಾಗಿದೆ. ಆದರೂ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಿ ಎಫ್ಐಆರ್ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ವಿವರಿಸಲಾಗಿದೆ.
Laxmi News 24×7