ದಾವಣಗೆರೆ: ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ದೇಶದಲ್ಲೇ ಏಕೈಕ ಹಿರಿಯ ಶಾಸಕ, ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಅನುಭವಿ ಹಾಗೂ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು ಅನ್ನೋದು ಹೆಮ್ಮೆಯ ಸಂಗತಿ.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪನವರು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಹಿರಿಯ ಮುತ್ಸದ್ದಿ. ಇಂದು 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದು, ಇಂದಿಗೂ ಹುಮ್ಮಸ್ಸಿನಲ್ಲೇ ಕ್ಷೇತ್ರದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ರಾಜಕೀಯಕ್ಕೆ ಧುಮುಕಿದ್ದೇ ತಮ್ಮ 60ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ದಾವಣಗೆರೆಗೆ ಆಗಮಿಸಿ ಕೇಕ್ ಕತ್ತರಿಸಿ ಶುಭಾಶಯ ಕೋರಿದರು.ಶಾಮನೂರು ಗ್ರಾಮದಲ್ಲಿ ಜನನ: ಶಾಮನೂರು ಶಿವಶಂಕರಪ್ಪ ಅವರು ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಪಡೆದ ಅವರು, ಡಿಆರ್ಎಂ ಸೈನ್ಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದಿದ್ದಾರೆ. ಅಕ್ಕಿ ವ್ಯಾಪಾರ ಮಾಡುತ್ತಾ ರಾಜಕೀಯಕ್ಕೆ ಪ್ರವೇಶ ಮಾಡಿದ್ದು ಇತಿಹಾಸ. ಮೊಟ್ಟ ಮೊದಲ ಬಾರಿಗೆ ಅವರು ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿದ್ದ ದಾವಣಗೆರೆ ನಗರಸಭೆಯ ಸದಸ್ಯರಾಗಿ, ಬಳಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ನಲ್ಲಿ ದಶಕಗಳ ಕಾಲ ರಾಜಕಾರಣ ಮಾಡಿರುವ ಶಾಮನೂರು, ಜಿಲ್ಲೆಯಲ್ಲಿ ಅಷ್ಟೇ ಅಲ್ಲದೇ ರಾಜ್ಯದಲ್ಲೇ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದು ಅವರ ವರ್ಚಸ್ಸಿಗೆ ಸಾಕ್ಷಿ. ಆರಂಭದಲ್ಲಿ ಕಾರ್ಮಿಕ ಮುಖಂಡ ಪಂಪಾಪತಿ ಅವರು ಇಲ್ಲಿ ಮೂರು ಸಲ ಕಮ್ಯೂನಿಸ್ಟ್ ಪಕ್ಷದಿಂದ ಶಾಸಕರಾಗಿದ್ದರು. ನಂತರ ದಾವಣಗೆರೆ ದಣಿ ಎಂದೇ ಹೆಸರಾಗಿರುವ ಶಾಮನೂರು ಅವರ ರಾಜಕೀಯ ಕ್ಷೇತ್ರವಾಗಿ ಮುಂದುವರಿಯಿತು.