ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತುರದಲ್ಲಿ ಮೋಸದ ಜಾಲಕ್ಕೆ ಬೀಳಬಾರದು ಎಂದು ಹೇಳಿದ್ದಾರೆ.
ವೈದ್ಯಕೀಯ ಸೀಟು ಕೊಡಿಸುತ್ತೇವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ. ಹೇಗಾದರೂ ಮಾಡಿ ಒಳ್ಳೆ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಲಹೆ ನೀಡಿದ್ದಾರೆ.