ನವದೆಹಲಿ,ಡಿ21-ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಸ್ಥಾಪಿಸಬೇಕು ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.
ದೇಶದಲ್ಲಿ ಆರ್ಥಿಕ ಅಪರಾಧ ಪ್ರಕರಣಗಳು, ತೆರಿಗೆ ವಂಚನೆಯಂತಹ, ಅಕ್ರಮ ಹಣ ವರ್ಗಾವಣೆಯಂತಹ ಭ್ರಷ್ಟಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಒಂದು ವರ್ಷದೊಳಗೆ ಜಿಲ್ಲೆಗೊಂದು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನ್ಕುಮಾರ್ ಉಪಾದ್ಯಾಯ ಎಂಬುವರು ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆಗೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ.
ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳ ಶೀಘ್ರ ವಿಚಾರಣೆ ನಡೆಸುವಂತೆ ಎಲ್ಲಾ ಹೈಕೋರ್ಟ್ಗಳಿಗೂ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಉಪಾದ್ಯಾಯ ಮನವಿ ಮಾಡಿಕೊಂಡಿದ್ದಾರೆ.
ಭ್ರಷ್ಟಾಚಾರ ತಡೆಗೆ ದೇಶದಲ್ಲಿ ಸಮರ್ಪಕವಾದ ಕಾಯ್ದೆಗಳು ಜಾರಿಯಲ್ಲಿಲ್ಲದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಯೋಜನೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹೀಗಾಗಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಉದ್ದೇಶದಿಂದ ಜಿಲ್ಲೆಗೊಂದು ವಿಶೇಷ ಭ್ರಷ್ಟಾಚಾರ ನಿಯಂತ್ರಣ ನ್ಯಾಯಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಅರ್ಜಿದಾರರು ಅಭಿಪ್ರಾಯಪಟ್ಟಿದ್ದಾರೆ.