ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಿದೆ.
ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು, “ಹೃದಯಾಘಾತಕ್ಕೆ ಕೋವಿಡ್ ಸೋಂಕು ಕೂಡ ಕಾರಣವಾಗಿರುಬಹುದೇ ಹೊರತು ಲಸಿಕೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
“ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಮತ್ತು ಕೋವಿಡ್ನಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಈ ಸಂಬಂಧ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಕೋವಿಡ್ ನಂತರ ಸ್ವಲ್ಪ ಮಟ್ಟಿಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿರುವುದನ್ನು ದೃಢಪಡಿಸಿದೆ. ಆದರೆ, ಇದು ಲಸಿಕೆಯಿಂದಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ”.
“ಕೋವಿಡ್ ಸೋಂಕಿನ ನಂತರ ಮಧುಮೇಹ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿರುವುದು ಹೃದಯಾಘಾತಕ್ಕೆ ಒಂದು ಕಾರಣ ಎಂದು ಸಮಿತಿ ತಿಳಿಸಿದೆ. ಬಿಪಿ (ರಕ್ತದೊತ್ತಡ) ಹೆಚ್ಚಳವೂ ಹೃದಯಾಘಾತಕ್ಕೆ ಒಂದು ಕಾರಣವಾಗಿ ಪರಿಣಮಿಸಿದೆ. ಕೋವಿಡ್ ಸೋಂಕಿನಿಂದ ದೇಹದ ಮೇಲಾಗುವ ಪರಿಣಾಮಗಳು, ಇತರೆ ಔಷಧಿಗಳ ಸೇವನೆ, ದೈಹಿಕ ಚಟುವಟಿಕೆಯ ಕೊರತೆ, ಟಿವಿ ಮತ್ತು ಕಂಪ್ಯೂಟರ್ ಮುಂದೆ ಹೆಚ್ಚು ಸಮಯ ಕಳೆಯುವುದು ಕೂಡ ಹೃದಯಾಘಾತಕ್ಕೆ ಕಾರಣಗಳಾಗಿವೆ ಎಂದು ವರದಿ ಹೇಳಿದೆ. ಜನರ ಜೀವನಶೈಲಿಯೂ ಹೃದಯಾಘಾತಕ್ಕೆ ಒಂದು ಕಾರಣ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದ ವರದಿಗಳು ಸಹ ಈ ಅಂಶಗಳನ್ನು ಬೆಂಬಲಿಸುತ್ತವೆ” ಎಂದು ಸಚಿವರು ಹೇಳಿದರು.
“ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹಠಾತ್ ಮರಣಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಈ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು” ಎಂದು ಅವರು ತಿಳಿಸಿದರು.
Laxmi News 24×7