ಬೆಂಗಳೂರು : 2013 ರಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಅಬೂಬಕ್ಕರ್ ಸಿದ್ದಿಕಿ (60)ಯನ್ನ ಬಂಧಿಸಿರುವ ತಮಿಳುನಾಡು ಪೊಲೀಸರನ್ನ ರಾಜ್ಯ ಭಯೋತ್ಪಾದಕ ನಿಗ್ರಹ ದಳ (ಎಟಿಸಿ) ಅಧಿಕಾರಿಗಳು ಭೇಟಿಯಾಗಿ ಮಾಹಿತಿ ಕಲೆ ಹಾಕಿದ್ದಾರೆ. ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅವರ ವಿಚಾರಣೆಯ ಬಳಿಕ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ತಮಿಳುನಾಡು ಮೂಲದ ಅಲ್ ಉಮ್ಮಾ ಸಂಘಟನೆಯ ಸದಸ್ಯನಾಗಿ ಅಬೂಬಕ್ಕರ್ ಸಿದ್ದಿಕಿ ಗುರುತಿಸಿಕೊಂಡಿದ್ದ. 1998ರಲ್ಲಿ ಕೊಯಮತ್ತೂರು ಬಳಿ ಬಾಂಬ್ ಸ್ಫೋಟಿಸಿ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಹತ್ಯೆಗೆ ಯತ್ನಿಸಿದ್ದ ಬಳಿಕ ಅಲ್ ಉಮ್ಮಾ ಸಂಘಟನೆಯನ್ನ ಬ್ಯಾನ್ ಮಾಡಲಾಗಿತ್ತು. 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ ಹಿಂದೆ ಅಬೂಬಕ್ಕರ್ ಸಿದ್ದಿಕಿಯ ಕೈವಾಡವಿರುವುದನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದರು.
2013ರ ಏಪ್ರಿಲ್ 17ರಂದು ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಹಳೆಯ ಬೈಕ್ನಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗಿತ್ತು. ಸ್ಫೋಟದಿಂದ ಪೊಲೀಸ್ ಸಿಬ್ಬಂದಿ, ಓರ್ವ ಕಾಲೇಜು ವಿದ್ಯಾರ್ಥಿನಿ ಸಹಿತ 16 ಜನ ಗಾಯಗೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಅಬೂಬಕ್ಕರ್ ಸಿದ್ದಿಕಿ ತಲೆ ಮರೆಸಿಕೊಂಡಿರುವುದಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿದ್ದ ಆರೋಪಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ಶೀಘ್ರದಲ್ಲೇ ವಶಕ್ಕೆ ಪಡೆಯಲು ನ್ಯಾಯಾಲಯದ ಮೊರೆ ಹೋಗಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Laxmi News 24×7